ಬೆಂಗಳೂರು: ಅಹಂಕಾರ ಮೊದಲು, ಯುವಕರ ಭವಿಷ್ಯ ನಂತರ ಎಂಬುದು ಬಿಜೆಪಿ ನೀತಿ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.
ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿ ಪರೀಕ್ಷೆಯ ಅಕ್ರಮದಲ್ಲಿ ಬಂಧಿತ ಆರೋಪಿ ಐಪಿಎಸ್ ಅಧಿಕಾರಿ ಅಮ್ರಿತ್ ಪೌಲ್ ಅವರ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆಯಾಗಿರುವ ವರದಿಯನ್ನು ಉಲ್ಲೇಖಿಸಿ ಪ್ರಿಯಾಂಕ್ ಅವರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
‘ಐಪಿಎಸ್ ಅಧಿಕಾರಿ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆಯಾಗಿದೆ, ನ್ಯಾಯಾಂಗ ತನಿಖೆ ಇಲ್ಲ. ಆದರೆ, ಭ್ರಷ್ಟಾಚಾರಕ್ಕೆ ಸಂಬಂಧಿಸಿದ ‘ಪೇಸಿಎಂ’ ಪೋಸ್ಟರ್ ಬಗ್ಗೆ ಸಿಸಿಬಿಯಿಂದ ಅತಿಯಾದ ತನಿಖೆ ನಡೆಯುತ್ತಿದೆ. ಬಿಜೆಪಿ ಸರ್ಕಾರದ ಆದ್ಯತೆಗಳು ಏನೆಂಬುದು ಸ್ಪಷ್ಟ. ಅಹಂಕಾರ ಮೊದಲು, ಯುವಕರ ಭವಿಷ್ಯಕ್ಕಾಗಿ ಕಾಯಬಹುದು’ ಎಂದು ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ.
ಅಮ್ರಿತ್ ಪೌಲ್ ಅವರ ವಿರುದ್ಧದ ತನಿಖೆ ಪೂರ್ಣಗೊಳಿಸಿರುವ ಸಿಐಡಿ ತಂಡವು 1,406 ಪುಟಗಳ ಹೆಚ್ಚುವರಿ ಆರೋಪ ಪಟ್ಟಿಯನ್ನು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಬುಧವಾರ ಸಲ್ಲಿಸಿತ್ತು. ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಅಮ್ರಿತ್ ಪೌಲ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.