ADVERTISEMENT

ವಿಧಾನಸೌಧದಲ್ಲಿ ಪಾಕ್‌ ಪರ ಘೋಷಣೆ: ಆರೋಪಿಗಳಿಗೆ ಜಾಮೀನು

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2024, 15:25 IST
Last Updated 14 ಮಾರ್ಚ್ 2024, 15:25 IST
   

ಬೆಂಗಳೂರು: ‘ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆ’ ಎಂದು ಆರೋಪಿಸಲಾದ ಪ್ರಕರಣದಲ್ಲಿ ಬಂಧಿತ ಮೂವರಿಗೆ ನಗರದ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಕೋರ್ಟ್ (ಎಸಿಎಂಎಂ) ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಈ ಕುರಿತಂತೆ ಬಂಧಿತರಾದ ದೆಹಲಿಯ ಕಿಶನ್‌ ಗಂಜ್‌ನ ಮೊಹಮ್ಮದ್ ಇಲ್ತಾಜ್, ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮ್ಮದ್ ಶಫಿ ನಾಶಿಪುಡಿ, ಬೆಂಗಳೂರಿನ ಜಯಮಹಲ್‌ ನಿವಾಸಿ ಡಿ.ಎಸ್‌.ಮುನಾವರ್ ಅಹ್ಮದ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 39ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ವಿ.ವಿಜೇತ್‌ ಪುರಸ್ಕರಿಸಿದ್ದಾರೆ.

‘ಆರೋಪಿಗಳು ₹1 ಲಕ್ಷ ಮೊತ್ತದ ಮುಚ್ಚಳಿಕೆ ನೀಡಬೇಕು, ಇಬ್ಬರು ವ್ಯಕ್ತಿಗಳು ಜಾಮೀನು ಒದಗಿಸಬೇಕು, ಆರೋಪಿಗಳು ಭಾರತ ಬಿಟ್ಟು ಹೋಗಬಾರದು, ವಿಚಾರಣಾ ನ್ಯಾಯಾಲಯದ ಮುದ್ದತುಗಳಿಗೆ ಹಾಜರಾಗಬೇಕು ಮತ್ತು ಇಂತಹ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಕೂಡದು’ ಎಂಬ ಷರತ್ತುಗಳನ್ನು ವಿಧಿಸಲಾಗಿದೆ. 

ADVERTISEMENT

ವಿಚಾರಣೆ ವೇಳೆ ಆರೋಪಿಗಳ ಪರ ವಕೀಲರು ಮಂಡಿಸಿದ, ‘ಪೊಲೀಸರು ಪ್ರಕರಣ ದಾಖಲಿಸುವ ಮುನ್ನ ಪೂರ್ವಾನುಮತಿ ಪಡೆದಿಲ್ಲ. ಆರೋಪಿಗಳಿಗೆ ಸಿಆರ್‌ಪಿಸಿ ಕಲಂ 41ರ ಅನ್ವಯ ನೋಟಿಸ್‌ ನೀಡಿಲ್ಲ. ಅಂತೆಯೇ, ಆರೋಪಿಸಲಾದ ಘೋಷಣೆಯ ಮಾದರಿಯನ್ನು ಧ್ವನಿ ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಹಾಗಾಗಿ, ಇದು ಮೇಲ್ನೋಟಕ್ಕೆ ಸಾಕ್ಷ್ಯವೇ ಇಲ್ಲದ ಪ್ರಕರಣ ಎಂಬುದು ಸಾಬೀತಾಗುತ್ತದೆ’ ಎಂಬ ಅಂಶಗಳನ್ನು ಪರಿಗಣಿಸಿ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ.

ಪ್ರಕರಣವೇನು?: 

‘ಕಳೆದ ತಿಂಗಳ 27ರಂದು ವಿಧಾನಸೌಧದಲ್ಲಿ ರಾಜ್ಯಸಭೆ ಚುನಾವಣೆಗೆ ಮತದಾನ ನಡೆದಿತ್ತು. ಫಲಿತಾಂಶ ಪ್ರಕಟವಾದ ಬಳಿಕ, ವಿಜೇತ ಅಭ್ಯರ್ಥಿ ನಾಸಿರ್‌ ಹುಸೇನ್‌ ಪರ ಸಂಭ್ರಮಾಚರಿಸುವ ವೇಳೆ ಆರೋಪಿಗಳು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾರೆ’ ಎಂದು ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.