ADVERTISEMENT

ಪಾಕ್‌ ಪರ ಘೋಷಣೆ ಪ್ರಕರಣವನ್ನು ವಿಶಾಲ ದೃಷ್ಟಿಕೋನದಿಂದ ನೋಡಬೇಕು: ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2020, 0:59 IST
Last Updated 19 ಏಪ್ರಿಲ್ 2020, 0:59 IST
   

ಬೆಂಗಳೂರು: "ಪಾಕಿಸ್ಥಾನದ ಪರ ಘೋಷಣೆ ಕೂಗಿದ ಆರೋಪದಡಿ ಕೆಎಲ್ಇ ಎಂಜಿನಿಯರಿಂಗ್ ಕಾಲೇಜಿನ ಮೂವರು ಕಾಶ್ಮೀರ ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿರುವ ದೇಶದ್ರೋಹ ಪ್ರಕರಣವನ್ನು ಪ್ರಾಸಿಕ್ಯೂಷನ್ ವಿಶಾಲ ದೃಷ್ಟಿಕೋನದಿಂದ ನೋಡಬೇಕಿದೆ" ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಜಾಮೀನು ಕೋರಿ ಆರೋಪಿಗಳಾದ ತಾಲಿಬ್ ಮಜೀದ್, ಆಮಿರ್ ಮೊಹಿಯುದ್ದಿನ್ ವನಿ ಹಾಗೂ ಬಸೀತ್‌ ಆಶಿಖ್ ಸೋಫಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಜಿ.ನರೇಂದರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

"ಆರೋಪಿಗಳು ದೇಶದ್ರೋಹ ಅಪರಾಧ ಎಸಗಿದ್ದಾರೆ ಎಂಬುದನ್ನು ಪುಷ್ಟೀಕರಿಸುವ ಪ್ರಬಲ ಅಂಶಗಳನ್ನು ಪ್ರಾಸಿಕ್ಯೂಷನ್ ಮೇಲ್ನೋಟಕ್ಕೆ ಬಹಿರಂಗಪಡಿಸುತ್ತಿಲ್ಲ. ಅಂತೆಯೇ ಈ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ಸ್ಕಾಲರ್ ಶಿಪ್ ಪಡೆಯುತ್ತಿರುವವರು ಎಂಬ ಅಂಶ ಗಮನಾರ್ಹ. ಇವರಿಗೆಲ್ಲಾ ಆಪ್ತ ಸಮಾಲೋಚನೆಯ ಅಗತ್ಯವಿದೆ" ಎಂದು ನ್ಯಾಯಪೀಠ ಹೇಳಿದೆ.

ADVERTISEMENT

ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಾಸಿಕ್ಯೂಷನ್, "ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಜಿಲ್ಲಾ ನ್ಯಾಯಾಲಯದಿಂದ ದಾಖಲೆ ತರಿಸಿಕೊಳ್ಳಲು ಕಾಲಾವಕಾಶ ನೀಡಬೇಕು" ಎಂದು ಮನವಿ ಮಾಡಿದೆ.

ಇದನ್ನು ಪರಿಗಣಿಸಿದ ನ್ಯಾಯಪೀಠ, ವಿಚಾರಣೆಯನ್ನು ಇದೇ 24ಕ್ಕೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.