ಥಾವರ್ ಚಂದ್ ಗೆಹಲೋತ್
ಬೆಂಗಳೂರು: ‘ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡಿರುವ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರು ಹೋಗುವ ಕಾರ್ಯಕ್ರಮಗಳಲ್ಲೆಲ್ಲಾ ಕಪ್ಪು ಬಾವುಟ ಪ್ರದರ್ಶಿಸುತ್ತೇವೆ’ ಎಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಸಂಚಾಲಕ ಮಾವಳ್ಳಿ ಶಂಕರ್ ಹೇಳಿದ್ದಾರೆ.
ರಾಜ್ಯಪಾಲರ ವಿರುದ್ಧದ ಹೋರಾಟದಲ್ಲಿ ಶೋಷಿತ ಸಮುದಾಯಗಳ ಎಲ್ಲರೂ ಭಾಗಿಯಾಗಬೇಕು ಎಂದು ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಮಾಧ್ಯಮಗೋಷ್ಠಿಯಲ್ಲಿ ಒಕ್ಕೂಟವು ಕರೆ ನೀಡಿದೆ.
‘ಕೋಮುವಾದಿ ಬಿಜೆಪಿ ಮತ್ತು ಜಾತಿವಾದಿ ಜೆಡಿಎಸ್, ರಾಜಭವನವನ್ನು ತಮ್ಮ ಕಚೇರಿಯನ್ನಾಗಿ ಮಾಡಿಕೊಂಡಿವೆ. ಹಿಂದುಳಿದ ವರ್ಗಗಳ ನಾಯಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದುರ್ಬಲಗೊಳಿಸಲು ಈ ಎರಡು ಪಕ್ಷಗಳು ಮಾಡಿರುವ ಪಿತೂರಿಯ ಭಾಗವಾಗಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಕೆಲಸ ಮಾಡುತ್ತಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ’ ಎಂದು ಅವರು ಹೇಳಿದ್ದಾರೆ.
ಒಕ್ಕೂಟದ ಪ್ರಧಾನ ಸಂಚಾಲಕ ಕೆ.ಎಂ.ರಾಮಚಂದ್ರಪ್ಪ, ‘ರಾಜ್ಯಪಾಲರು ಭಾಗಿಯಾಗುವ ರಾಜ್ಯದ ಯಾವುದೇ ವಿಶ್ವವಿದ್ಯಾಲಯದ ಘಟಿಕೋತ್ಸವಗಳಲ್ಲಿ ಒಕ್ಕೂಟದ ವಿದ್ಯಾರ್ಥಿ ಘಟಕದ ಸದಸ್ಯರು ಕಪ್ಪು ಬಾವುಟ ಪ್ರದರ್ಶಿಸಲಿದ್ದಾರೆ. ರಾಜ್ಯದ ಎಲ್ಲೆಡೆ ಅವರ ವಿರುದ್ಧ ಪ್ರತಿಭಟನೆ ನಡೆಸಬೇಕು. ಅದರಲ್ಲಿ ಒಕ್ಕೂಟದ ಸಹ ಸಂಘಟನೆಗಳು ಭಾಗಿಯಾಗಬೇಕು’ ಎಂದು ಕರೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.