ಬೊಮ್ಮನಹಳ್ಳಿ: ಪ್ರತಿ ಲೀಟರ್ ಹಾಲಿಗೆ ₹ 5 ಹೆಚ್ಚಿಸುವಂತೆ ಆಗ್ರಹಿಸಿ ಸೆ.22ರಂದು ಬೃಹತ್ ಪ್ರತಿಭಟನೆ ನಡೆಸಲು ಬೆಂಗಳೂರು, ಕೋಲಾರ, ತುಮಕೂರು ಮತ್ತು ಮಂಡ್ಯ ಹಾಲು ಒಕ್ಕೂಟಗಳು ತೀರ್ಮಾನಿಸಿವೆ ಎಂದು ಬಮೂಲ್ ಅಧ್ಯಕ್ಷ ನರಸಿಂಹಮೂರ್ತಿ ತಿಳಿಸಿದರು.
ಹೈನುಗಾರಿಕೆ ಲಾಭದಾಯಕವಲ್ಲ ಎಂಬ ಕಾರಣಕ್ಕಾಗಿ ರೈತರು ಹೈನುಗಾರಿಕೆಯಿಂದ ವಿಮುಖರಾಗುತ್ತಿದ್ದಾರೆ. ಪರಿಣಾಮವಾಗಿ ಪ್ರತಿ ದಿನದ ಹಾಲು ಉತ್ಪಾದನೆ 3 ಲಕ್ಷ ಲೀಟರ್ ಕುಸಿತ ಕಂಡಿದೆ. ಜಾನುವಾರು ಫೀಡ್ಸ್ಗೆ ನೀಡುತ್ತಿದ್ದ ಸಬ್ಸಿಡಿಯನ್ನು ಸರ್ಕಾರ ಹಿಂತೆಗೆದುಕೊಂಡಿದ್ದು, ಸದ್ಯ ಚೀಲಕ್ಕೆ ₹ 1,040 ಆಗಿದೆ. ಹೀಗಾಗಿ, ಲಾಭಕ್ಕಿಂತ ಖರ್ಚು ಹೆಚ್ಚುತ್ತಿದ್ದು, ರೈತರು ಹೈನುಗಾರಿಕೆಯನ್ನು ತೊರೆಯುತ್ತಿದ್ದಾರೆ. ಇದರಿಂದ ಹಾಲು ಉತ್ಪಾದನೆ ಕುಂಠಿತ ಆಗುತ್ತಿದೆ. ಇದು ನಿಜಕ್ಕೂ ಆಘಾತಕಾರಿ’ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಎರಡೂ ಅವಧಿಯಲ್ಲಿ ಹಾಲಿಗೆ ಪ್ರೋತ್ಸಾಹಧನ ನೀಡಿದ್ದರು. ಪರಿಸ್ಥಿತಿ ಆಧರಿಸಿ ದರ ಹೆಚ್ಚಳಕ್ಕೆ ಆಸ್ಪದ ನೀಡಿದ್ದರು. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದರ ಹೆಚ್ಚಳಕ್ಕೆ ಮಾಡಿದ ಮನವಿಗೆ ಅವರು ಸ್ಪಂದಿಸುತ್ತಿಲ್ಲ ಎಂದು ದೂರಿದರು.
ಈಗಾಗಲೇ ದರ ಹೆಚ್ಚಳಕ್ಕೆ ಆಗ್ರಹಿಸಿ ಲಕ್ಷಾಂತರ ರೈತರು ಮುಖ್ಯಮಂತ್ರಿಗೆ ಪತ್ರ ಚಳವಳಿ ಮೂಲಕ ಮನವಿ ಮಾಡಿದರೂ ಕಿವಿಗೊಡುತ್ತಿಲ್ಲ. ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ದರ ಹೆಚ್ಚಳಕ್ಕೆ ಮನಸ್ಸು ಮಾಡದಿರಬಹುದು. ರೈತರ ಉಳಿವಿ ಗಾಗಿ ಹಾಗೂ ಹಾಲು ಉತ್ಪಾದನೆಯ ಕುಸಿತ ತಡೆಯಲು ದರ ಏರಿಕೆ ಅನಿವಾರ್ಯ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.