ADVERTISEMENT

ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2021, 17:38 IST
Last Updated 14 ಸೆಪ್ಟೆಂಬರ್ 2021, 17:38 IST
ಪಿಟಿಸಿಲ್ ಕಾಯ್ದೆ ತಿದ್ದುಪಡಿಗೆ ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ನಡೆದ ಮೆರವಣಿಗೆ –ಪ್ರಜಾವಾಣಿ ಚಿತ್ರ
ಪಿಟಿಸಿಲ್ ಕಾಯ್ದೆ ತಿದ್ದುಪಡಿಗೆ ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ನಡೆದ ಮೆರವಣಿಗೆ –ಪ್ರಜಾವಾಣಿ ಚಿತ್ರ   

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಭೂ ಪರಭಾರೆ ನಿಷೇಧ ಕಾಯ್ದೆಗೆ (ಪಿಟಿಸಿಎಲ್‌) ಸಮಗ್ರ ತಿದ್ದುಪಡಿ ತರಬೇಕು ಎಂದು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು.

ಕೆಎಸ್‌ಆರ್‌ ರೈಲು ನಿಲ್ದಾಣದಿಂದ ಮೆರವಣಿಗೆ ಹೊರಟ ವಿವಿಧ ಸಂಘಟನೆಗಳ ಹೋರಾಟಗಾರರು, ಮೌರ್ಯ ವೃತ್ತದಲ್ಲಿ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ. ವೆಂಕಟಸ್ವಾಮಿ, ‘ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಭೂಮಿ ಉಳಿಸದಿದ್ದರೆ ದಲಿತ ಸಂಘಟನೆಗಳಿಂದ ದೊಡ್ಡ ಮೊಟ್ಟದ ಹೋರಾಟವನ್ನು ಸರ್ಕಾರ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.

‘ದಲಿತರ ಭೂಮಿ ಬಲಾಢ್ಯರ ಪಾಲಾಗುವುದನ್ನು ತಪ್ಪಿಸಲು ಡಿ. ದೇವರಾಜ ಅರಸು ಮತ್ತು ಬಿ. ಬಸವಲಿಂಗಪ್ಪ ಅವರ ದಲಿತ ಪರ ಕಾಳಜಿಯಿಂದಾಗಿ ಈ ಕಾಯ್ದೆ 1978ರಲ್ಲಿ ಜಾರಿಗೆ ಬಂದಿತ್ತು. ಕಾಯ್ದೆಯ ಲೋಪಗಳ‌ನ್ನೇ ಮುಂದಿಟ್ಟುಕೊಂಡು ಸರ್ಕಾರ ಆದೇಶಗಳನ್ನು ಹೊರಡಿಸುತ್ತಿದೆ. ನ್ಯಾಯಾಲಯಗಳು ತೀರ್ಪುಗಳನ್ನು ನೀಡುತ್ತಿವೆ’ ಎಂದು ಹೇಳಿದರು.

ADVERTISEMENT

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡಲೇ ಉನ್ನತ ಮಟ್ಟದ ಸಭೆ ನಡೆಸಬೇಕು. ದಲಿತ ಸಂಘಟನೆಗಳ ಮುಖಂಡರ ಅಭಿಪ್ರಾಯ ಪಡೆಯಬೇಕು’ ಎಂದು ಒತ್ತಾಯಿಸಿದರು.

ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಸರ್ಕಾರ ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ, ಎಲ್ಲಾ ಸಚಿವರು ಮತ್ತು ಶಾಸಕರಿಗೆ ಘೇರಾವ್‌ ಮಾಡಲಾಗುವುದು ಎಂದು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.