ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು, ಪೊಲೀಸ್ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಅವರನ್ನು ಗುರುವಾರ ಬಂಧಿಸಿದ್ದಾರೆ.
‘ನೇಮಕಾತಿ ವಿಭಾಗದಲ್ಲಿ 2011 ರಿಂದ ಕೆಲಸ ಮಾಡುತ್ತಿದ್ದ ಶಾಂತಕುಮಾರ್, ಅಕ್ರಮದಲ್ಲಿ ಭಾಗಿಯಾಗಿರುವ ಮಾಹಿತಿ ಲಭ್ಯವಾಗಿತ್ತು. ನೋಟಿಸ್ ನೀಡಿ ವಿಚಾರಣೆಗೆ ಕರೆಸಲಾಗಿತ್ತು. ಆರೋಪಕ್ಕೆ ಸಂಬಂಧಪಟ್ಟಂತೆ ಪುರಾವೆಗಳು ಸಿಗುತ್ತಿದ್ದಂತೆ ಶಾಂತಕುಮಾರ್ ಅವರನ್ನು ಬಂಧಿಸಲಾಗಿದೆ. ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲಾಗುವುದು’ ಎಂದು ಸಿಐಡಿ ಮೂಲಗಳು ಹೇಳಿವೆ.
ನೇಮಕಾತಿ ವಿಭಾಗದ ಡಿಐಜಿ ಆಪ್ತ ಸಹಾಯಕ ಶ್ರೀನಿವಾಸ್, ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಹರ್ಷ, ವಿಭಾಗದಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ನಗರ ಸಶಸ್ತ್ರ ಮೀಸಲು ಪಡೆಯ ಸಬ್ ಇನ್ಸ್ಪೆಕ್ಟರ್ಗಳಾದ ಲೋಕೇಶಪ್ಪ, ಮಂಜುನಾಥ್ ಹಾಗೂ ಶ್ರೀಧರ್ ಅವರನ್ನು ಇತ್ತೀಚೆಗಷ್ಟೇ ಸಿಐಡಿ ಬಂಧಿಸಿತ್ತು.
‘ಪಿಎಸ್ಐ ನೇಮಕಾತಿ ಹೊಣೆ ಹೊತ್ತುಕೊಂಡಿದ್ದ ವಿಭಾಗದಲ್ಲೇ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಡಿವೈಎಸ್ಪಿ ಶಾಂತಕುಮಾರ್ ವಿಚಾರಣೆ ನಡೆಸಿದರೆ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ’ ಎಂದೂ ಸಿಐಡಿ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.