ಸಿದ್ದಾಪುರ: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಜುಲೈ 13 ರಂದು ಸಿಐಡಿ ವಿಚಾರಣೆಗೆ ಒಳಗಾಗಿದ್ದ ತಾಲ್ಲೂಕಿನ ನೆಲೆಮಾಂವ ಗ್ರಾಮದ ಗಣಪತಿ ಭಟ್ (63) ಶುಕ್ರವಾರ ಹೆರೂರು ಗ್ರಾಮದ ತಟ್ಟೀಕೈ ಎಂ.ಆರ್.ಭಟ್ಟ ಅವರ ತೋಟದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಲಕ್ಷಾಂತರ ರೂಪಾಯಿ ನೀಡಿ ಅಕ್ರಮವಾಗಿ ಎಸ್ಐ ಹುದ್ದೆಗೆ ಆಯ್ಕೆಯಾಗಿದ್ದ ಇಬ್ಬರು ಅಭ್ಯರ್ಥಿಗಳು ಭಟ್ ಹೆಸರು ಪ್ರಸ್ತಾಪಿಸಿದ್ದ ಕಾರಣ ಸಿಐಡಿ ವಿಚಾರಣೆ ನಡೆಸಿತ್ತು. ಆದರೆ ಪ್ರಕರಣ ದಾಖಲಿಸಿರಲಿಲ್ಲ. ನೆಲೆಮಾಂವ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿದ್ದ ಅವರು ಈ ಹಿಂದೆ ಅಣಲೆಬೈಲ್ ಗ್ರಾಮ ಪಂಚಾಯ್ತಿ ಸದಸ್ಯರಾಗಿ ಕೆಲಸ ಮಾಡಿದ್ದರು. ಮೃತರಿಗೆ ಪತ್ನಿ, ಪುತ್ರ ಇದ್ದಾರೆ.
‘ಸಾಮಾಜಿಕ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ಅವರು ಈಚೆಗೆ ಒತ್ತಡಕ್ಕೆ ಸಿಲುಕಿದ್ದರು. ಆದರೆ ಯಾವ ಕಾರಣಕ್ಕೆ ಎಂಬುದು ಸ್ಪಷ್ಟವಾಗಿಲ್ಲ’ ಎಂದು ಕುಟುಂಬದ ಮೂಲಗಳು ತಿಳಿಸಿವೆ. ‘ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ತನಿಖೆ ಕೈಗೊಂಡಿದ್ದಾಗಿ’ ಸಿದ್ದಾಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.