ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರ ಕಚೇರಿಯ ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ಪಿಯು ಉಪನ್ಯಾಸಕರು ಅಥವಾ ಪ್ರಾಂಶುಪಾಲರನ್ನೇ ನೇಮಕ ಮಾಡಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಒತ್ತಾಯಿಸಿದೆ.
ಸರ್ಕಾರಿ, ಅನುದಾನಿತ, ಖಾಸಗಿ ಕಾಲೇಜುಗಳು ಸೇರಿ ರಾಜ್ಯದಲ್ಲಿ 6 ಸಾವಿರಕ್ಕೂ ಹೆಚ್ಚು ಪದವಿಪೂರ್ವ ಕಾಲೇಜುಗಳಿವೆ. 12 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಜಿಲ್ಲಾ ಉಪ ನಿರ್ದೇಶಕರ ಕಚೇರಿಗಳಲ್ಲಿ ಕೆಲಸದ ಒತ್ತಡ ಅಧಿಕವಾಗಿದೆ. ಹಾಗಾಗಿ, ಅಗತ್ಯ ಅಧಿಕಾರಿಗಳು, ಸಿಬ್ಬಂದಿ ನೇಮಿಸುವ ಮೂಲಕ ಎಲ್ಲ ಜಿಲ್ಲಾ ಕಚೇರಿಗಳ ಬಲವರ್ಧನೆ ಮಾಡಬೇಕು ಎಂದು ಸಂಘದ ಅಧ್ಯಕ್ಷ ಎ.ಎಚ್. ನಿಂಗೇಗೌಡ ಹೇಳಿದ್ದಾರೆ.
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ (ಡಯಟ್) ಉಪನ್ಯಾಸಕರನ್ನು ಪದವಿಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರ ಕಚೇರಿ ಕಾರ್ಯಗಳಿಗೆ ನೇಮಿಸಬಾರದು. ವೃಂದ ಮತ್ತು ನೇಮಕಾತಿ ನಿಯಮಗಳಲ್ಲೂ ನೇಮಕಕ್ಕೆ ಅವಕಾಶ ಇಲ್ಲ. ಪಿಯು ಕಾಲೇಜುಗಳಲ್ಲಿ ಬಡ್ತಿ ಇಲ್ಲದೇ 25, 30 ವರ್ಷಗಳು ಕೆಲಸ ಮಾಡಿರುವ ಉಪನ್ಯಾಸಕರನ್ನೇ ತಕ್ಷಣ ನಿಯೋಜನೆ ಮಾಡಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.