
ವಿಧಾನ ಸೌಧ
(ಸಾಂಕೇತಿಕ ಚಿತ್ರ)
ಬೆಂಗಳೂರು: ರಾಜ್ಯದ ವಿವಿಧ ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ ಮತ್ತು ಶೌಚಾಲಯಗಳ ನಿರ್ಮಾಣ ಹಾಗೂ ಕೊಠಡಿಗಳ ದುರಸ್ತಿಗೆ ₹94.38 ಕೋಟಿ ವೆಚ್ಚದ ಕ್ರಿಯಾ ಯೋಜನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
ಹೆಚ್ಚುವರಿ ಕೊಠಡಿ ಮತ್ತು ಶೌಚಾಲಯಗಳ ನಿರ್ಮಾಣ ಹಾಗೂ ದುರಸ್ತಿಗೆ ಹಣಕಾಸು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025–26ನೇ ಸಾಲಿನ ಬಜೆಟ್ನಲ್ಲಿ ಘೋಷಿಸಿದ್ದರು. ಅದರಂತೆ ಕ್ರಿಯಾಯೋಜನೆ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಗೆ (ಪದವಿ ಪೂರ್ವ) ಸೂಚಿಸಲಾಗಿತ್ತು.
116 ಕಾಲೇಜುಗಳಲ್ಲಿ 268 ಕೊಠಡಿಗಳು ಮತ್ತು 123 ಶೌಚಾಲಯಗಳ ನಿರ್ಮಾಣ, 93 ಕಾಲೇಜುಗಳ 264 ಕೊಠಡಿಗಳ ದುರಸ್ತಿಗೆ ₹94.38 ಕೋಟಿ ವೆಚ್ಚದ ಕ್ರಿಯಾಯೋಜನೆಯನ್ನು ಸಿದ್ಧಪಡಿಸಿ, ಸಲ್ಲಿಸಲಾಗಿತ್ತು. ಪರಿಶಿಷ್ಟ ಜಾತಿಗಳ ಉಪಯೋಜನೆ ಅಡಿಯಲ್ಲಿ ₹19.74 ಕೋಟಿ, ಪರಿಶಿಷ್ಟ ಪಂಗಡಗಳ ಉಪಯೋಜನೆ ಅಡಿಯಲ್ಲಿ ₹7.99 ಕೋಟಿ ಹಾಗೂ ಸಾಮಾನ್ಯ ಅನುದಾನದಲ್ಲಿ ₹66.66 ಕೋಟಿ ಬಳಸಿಕೊಳ್ಳಬಹುದು ಎಂದು ವಿವರಿಸಿತ್ತು.
ಈ ಕ್ರಿಯಾ ಯೋಜನೆಗೆ ಸರ್ಕಾರವು ಅನುಮೊದನೆ ನೀಡಿ, ಆದೇಶಿಸಿದೆ. ಹೊಸ ಕೊಠಡಿಗಳ ನಿರ್ಮಾಣಕ್ಕೆ ₹76 ಕೋಟಿ, ಶೌಚಾಲಯಗಳ ನಿರ್ಮಾಣಕ್ಕೆ ₹12.6 ಕೋಟಿ ಮತ್ತು ಕೊಠಡಿಗಳ ದುರಸ್ತಿಗೆ ₹52 ಲಕ್ಷ ನಿಗದಿಪಡಿಸಿದೆ. ಈ ಆರ್ಥಿಕ ವರ್ಷದ ಅಂತ್ಯದ ವೇಳೆಗೆ ಕಾಮಗಾರಿಗಳನ್ನು ಅನುಷ್ಠಾನಕ್ಕೆ ತರುವಂತೆ ಸೂಚಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.