ADVERTISEMENT

ಪದವಿಪೂರ್ವ ಕಾಲೇಜು: ಹೆಚ್ಚು ಶುಲ್ಕ ಪಡೆದರೆ ಶಿಸ್ತುಕ್ರಮ–ಎಸ್.ಸುರೇಶ್‌ ಕುಮಾರ್

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2020, 19:52 IST
Last Updated 13 ನವೆಂಬರ್ 2020, 19:52 IST
ಎಸ್. ಸುರೇಶ್‌ ಕುಮಾರ್
ಎಸ್. ಸುರೇಶ್‌ ಕುಮಾರ್   

ಬೆಂಗಳೂರು: ರಾಜ್ಯದ ಕೆಲವು ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಅಭಿವೃದ್ಧಿ ಶುಲ್ಕದ ಹೆಸರಿನಲ್ಲಿ ಹೆಚ್ಚುವರಿ ಶುಲ್ಕ ಪಡೆದರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ ಕುಮಾರ್ ಎಚ್ಚರಿಸಿದ್ದಾರೆ.

‘ವಿದ್ಯಾರ್ಥಿಗಳಿಂದ ಹೆಚ್ಚುವರಿ ಶುಲ್ಕ ಪಡೆಯುತ್ತಿರುವುದು ಗಮನಕ್ಕೆ ಬಂದಿದೆ. ಇದು ಅನಪೇಕ್ಷಿತ ಕಾರ್ಯ. ಇಂತಹ ಪ್ರಕರಣಗಳು ಕಂಡು ಬಂದರೆ ಸಂಬಂಧಿಸಿದ ಕಾಲೇಜುಗಳ ಪ್ರಾಚಾರ್ಯರನ್ನೇ ನೇರ ಹೊಣೆಗಾರರನ್ನಾಗಿಸಿ, ಶಿಸ್ತುಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ತಿಳಿಸಿದ್ದಾರೆ.

‘ಸಂಬಂಧಪಟ್ಟ ಜಿಲ್ಲಾ ಉಪನಿರ್ದೇಶಕರು ತಮ್ಮ ಜಿಲ್ಲೆಯ ಎಲ್ಲ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರಿಗೆ ಸೂಚನೆ ನೀಡಬೇಕು. ಈ ರೀತಿ ಹೆಚ್ಚುವರಿ ಶುಲ್ಕ ಪಡೆದ ಪ್ರಕರಣದಲ್ಲಿ ಪ್ರಾಂಶುಪಾಲರ ವಿರುದ್ಧ ಕೈಗೊಂಡಿರುವ ಕ್ರಮದ ಕುರಿತು ಕೇಂದ್ರ ಕಚೇರಿಗೆ ವರದಿ ಸಲ್ಲಿಸಬೇಕು’ ಎಂದೂ ಅವರು ಸೂಚಿಸಿದ್ದಾರೆ.

ADVERTISEMENT

ಶುಲ್ಕ ವಿನಾಯಿತಿ:

ಹೊರ ರಾಜ್ಯಗಳಿಂದ 12ನೇ ತರಗತಿ ವ್ಯಾಸಂಗ ಮುಂದುವರಿಸಲು ಬರುವ ಎಲ್ಲ ವಿದ್ಯಾರ್ಥಿಗಳಿಗೆ ಕಾಲೇಜು ಬದಲಾವಣೆ ಹಾಗೂ ಅರ್ಹತಾ ಪತ್ರದ ಶುಲ್ಕ ವಿನಾಯಿತಿ ನೀಡಲಾಗಿದೆ. ಇದು ಪ್ರಸಕ್ತ ಸಾಲಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

‘ಕೋವಿಡ್ ಇರುವುದರಿಂದ ಈ ವಿನಾಯಿತಿ ನೀಡಲಾಗಿದೆ’ ಎಂದು ಇಲಾಖೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.