ADVERTISEMENT

ಮೇ 20 ರಿಂದ ಪಿಯು ತರಗತಿ ಆರಂಭ

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2019, 20:23 IST
Last Updated 15 ಮಾರ್ಚ್ 2019, 20:23 IST
   

ಬೆಂಗಳೂರು: ದ್ವಿತೀಯ ಪಿಯು ತರಗತಿಗಳನ್ನು ಮೇ ಮೊದಲ ವಾರದ ಬದಲು ಮೇ 20ರಿಂದ ಆರಂಭಿಸಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಒಪ್ಪಿಗೆ ಸೂಚಿಸಿದ್ದಾರೆ.

ಬೇಸಿಗೆ ರಜೆ ಕಡಿತ ರದ್ದು ಮಾಡುವುದೂ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇದೇ 21ರಿಂದಸರ್ಕಾರಿ ಪದವಿಪೂರ್ವ ಉಪನ್ಯಾಸಕರು ಮೌಲ್ಯಮಾಪನ ಬಹಿಷ್ಕಾರ ಮತ್ತು ಅನಿರ್ದಿಷ್ಟ ಅಹೋರಾತ್ರಿ ಧರಣಿ ಮತ್ತು ನಡೆಸಲು ಉದ್ದೇಶಿಸಿದ್ದರು.

ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಉಪನ್ಯಾಸಕರ ನಡುವಿನ ಹಗ್ಗ ಜಗ್ಗಾಟಕ್ಕೆ ತೆರೆ ಎಳೆಯುವ ಸಂಬಂಧ ಶುಕ್ರವಾರ ವಿಧಾನಪರಿಷತ್‌ ಸದಸ್ಯರಾದ ಕೆ.ಟಿ.ಶ್ರೀಕಂಠೇಗೌಡ, ಬಸವರಾಜ ಹೊರಟ್ಟಿ, ಬೋಜೇಗೌಡ ಮತ್ತಿತರರು ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ADVERTISEMENT

ಉಪನ್ಯಾಸಕರ ಬೇಡಿಕೆಗಳನ್ನು ಸಹಾನುಭೂತಿಯಿಂದ ಆಲಿಸಿದ ಮುಖ್ಯಮಂತ್ರಿ ಮೇ 6ರ ಬದಲಿಗೆ ಮೇ 20ರಿಂದ ತರಗತಿಗಳನ್ನು ಆರಂಭಿಸಲು ಒಪ್ಪಿಗೆ ನೀಡಿದ್ದು, ಅಧಿಕಾರಿಗಳಿಗೂ ಸೂಚನೆ ನೀಡಿದ್ದಾರೆ. ಆದ್ದರಿಂದ, ಉಪನ್ಯಾಸಕರು ಧರಣಿ ಮತ್ತು ಮೌಲ್ಯಮಾಪನ ಬಹಿಷ್ಕಾರ ಕೈಬಿಡಬೇಕು ಎಂದು ಕೆ.ಟಿ.ಶ್ರೀಕಂಠೇಗೌಡ ಮನವಿ ಮಾಡಿದರು.

ಆ ಬಳಿಕ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್‌.ಆರ್‌.ಉಮಾಶಂಕರ್‌, ಇತರ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು.

‘ನಮ್ಮ ಎಲ್ಲ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಲಿಖಿತ ಆದೇಶ ಹೊರ ಬಿದ್ದ ಬಳಿಕವೇ ತೀರ್ಮಾನ ಪ್ರಕಟಿಸುತ್ತೇವೆ. ಸರ್ಕಾರದ ತೀರ್ಮಾನದ ಬಗ್ಗೆ ಸಂಘದ ಜಿಲ್ಲಾ ಪದಾಧಿಕಾರಿಗಳ ಜತೆ ಒಂದೆರಡು ದಿನಗಳಲ್ಲಿ ಮಾತುಕತೆ ನಡೆಸುತ್ತೇವೆ. ಬಳಿಕ ಸರ್ಕಾರಕ್ಕೆ ನಮ್ಮ ನಿರ್ಧಾರ ತಿಳಿಸುತ್ತೇವೆ’ ಸರ್ಕಾರಿ ಪದವಿಪೂರ್ವ ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.