ADVERTISEMENT

ಐಟಿಐ ಪ್ರಚಾರ ರಾಯಭಾರಿಯಾಗಿದ್ದ ಪುನೀತ್‌: ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2021, 16:37 IST
Last Updated 30 ಅಕ್ಟೋಬರ್ 2021, 16:37 IST
ಡಾ. ಸಿ.ಎನ್. ಅಶ್ವತ್ಥನಾರಾಯಣ
ಡಾ. ಸಿ.ಎನ್. ಅಶ್ವತ್ಥನಾರಾಯಣ   

ಬೆಂಗಳೂರು: ರಾಜ್ಯದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ (ಐಟಿಐ) ಪ್ರಚಾರ ರಾಯಭಾರಿಯಾಗಿದ್ದ ಪುನೀತ್‌ ರಾಜ್‌ಕುಮಾರ್‌, ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಈ ಕಾಲೇಜುಗಳ ಪರವಾಗಿ ಕೆಲಸ ಮಾಡಿದ್ದರು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಸರ್ಕಾರಿ ಐಟಿಐ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶ ಪಡೆಯುತ್ತಿರಲಿಲ್ಲ. ಈ ವಿಷಯವನ್ನು ಪುನೀತ್‌ ಅವರಲ್ಲಿ ಹಂಚಿಕೊಂಡಾಗ ಅವರು ನಮ್ಮ ಬೆಂಬಲಕ್ಕೆ ಬಂದಿದ್ದರು. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಐಟಿಐ ಕಾಲೇಜುಗಳ ಬ್ರ್ಯಾಂಡ್‌ ರಾಯಭಾರಿಯಾಗಿ ಕೆಲಸ ಮಾಡಿದ್ದರು’ ಎಂದರು.

ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕು ಎಂಬುದು ಅವರ ಕಳಕಳಿಯಾಗಿತ್ತು. ಅವರ ಜೀವನ ಹಸನಾಗಬೇಕು ಎಂದು ಸದಾ ಹೇಳುತ್ತಿದ್ದರು. ಈ ಕಾರಣದಿಂದಾಗಿಯೇ ಉದ್ಯೋಗದ ಅವಕಾಶ ಹೆಚ್ಚಿರುವ ಐಟಿಐ ಕೋರ್ಸ್‌ಗಳನ್ನು ಸೇರುವಂತೆ ವಿದ್ಯಾರ್ಥಿಗಳಿಗೆ ಸಂದೇಶ ನೀಡುತ್ತಿದ್ದರು. ಸಮಾಜಮುಖಿ ಪ್ರಜ್ಞೆ ಅವರ ಅಂತರಂಗದಲ್ಲಿ ಮನೆಮಾಡಿತ್ತು ಎಂದು ಹೇಳಿದರು.

ADVERTISEMENT

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಗ್ರಾಮೀಣ ಮಹಿಳಾ ಸ್ವಸಹಾಯ ಗುಂಪುಗಳು ತಯಾರಿಸಿರುವ ಮಣ್ಣಿನ ದೀಪಗಳ ಮಾರಾಟದ ಅಭಿಯಾನಕ್ಕೂ ಸಹಕಾರ ನೀಡಿದ್ದರು. ಅದಕ್ಕೆ ಸಂಬಂಧಿಸಿದ ಪ್ರಚಾರ ವಿಡಿಯೊ ಚಿತ್ರೀಕರಣದಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸಿದ್ದರು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.