ಸಿದ್ದರಾಮಯ್ಯ
ಬೆಂಗಳೂರು: ‘ಕೇಂದ್ರ ಸರ್ಕಾರ ನಿಗದಿಪಡಿಸಿರುವ ₹ 2,400 ಕನಿಷ್ಠ ಬೆಂಬಲ ಬೆಲೆಯಲ್ಲಿ ಪಶು ಹಾಗೂ ಕೋಳಿ ಆಹಾರ ಉತ್ಪಾದಕರು ರೈತರಿಂದ ಮೆಕ್ಕೆಜೋಳ ಖರೀದಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪಶು ಮತ್ತು ಕೋಳಿ ಆಹಾರ ಉತ್ಪಾದಕರ ಜೊತೆ ಸೋಮವಾರ ಸಭೆ ನಡೆಸಿದ ಅವರು, ‘ರಾಜ್ಯದಲ್ಲಿ ಈ ವರ್ಷ ಅತ್ಯಧಿಕ ಪ್ರಮಾಣದಲ್ಲಿ ಮೆಕ್ಕೆಜೋಳ ಉತ್ಪಾದನೆಯಾಗಿದೆ. ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ದರ ಕುಸಿದಿರುವುದರಿಂದ ರೈತರಿಗೆ ನೆರವಾಗಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ’ ಎಂದರು.
‘ಡಿಸ್ಟಿಲರಿಗಳು 7 ಲಕ್ಷ ಟನ್ ಮೆಕ್ಕೆಜೋಳ ಖರೀದಿ ಪ್ರಕ್ರಿಯೆಯನ್ನು ಈಗಾಗಲೇ ಆರಂಭಿಸಿವೆ. ಕೆಎಂಎಫ್ 50 ಸಾವಿರ ಟನ್ ಖರೀದಿಸಲಿದೆ. ಪಶು ಮತ್ತು ಕೋಳಿ ಆಹಾರ ಉತ್ಪಾದನಾ ವಲಯ ಕೂಡಾ ತಕ್ಷಣ 5 ಲಕ್ಷ ಟನ್ ಮೆಕ್ಕೆಜೋಳ ಖರೀದಿಸಬೇಕು’ ಎಂದು ಸೂಚನೆ ನೀಡಿದರು.
‘ಕರ್ನಾಟಕ ಮಾರುಕಟ್ಟೆ ಫೆಡರೇಶನ್ ಮೂಲಕ ರೈತರಿಂದ ಮೆಕ್ಕೆಜೋಳ ಖರೀದಿಸಿ ಸರಬರಾಜು ಮಾಡಲಾಗುವುದು. ಸಾಗಣೆ ವೆಚ್ಚ, ಲೋಡಿಂಗ್, ಅನ್ಲೋಡಿಂಗ್ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಕೋಳಿ ಉದ್ಯಮಕ್ಕೆ ಯಾವುದೇ ತೊಂದರೆ ಆಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದರು.
‘ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ 17.6 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬಿತ್ತನೆಯಾಗಿದ್ದು, 53.8 ಲಕ್ಷ ಮೆಕ್ಕೆಜೋಳ ಉತ್ಪಾದನೆ ಅಂದಾಜಿಸಲಾಗಿದೆ. ಇದರಲ್ಲಿ ಶೇ 50ರಿಂದ 60ರಷ್ಟು ಮೆಕ್ಕೆಜೋಳವನ್ನು ಕೋಳಿ ಮತ್ತು ಪಶು ಆಹಾರಕ್ಕೆ ಉಪಯೋಗಿಸಲಾಗುತ್ತದೆ. ಪ್ರತಿವರ್ಷ ಅಂದಾಜು 25.89 ಲಕ್ಷ ಟನ್ ಮೆಕ್ಕೆಜೋಳವನ್ನು ಕೋಳಿ ಮತ್ತು ಪಶು ಆಹಾರಕ್ಕೆ ಬಳಸಲಾಗುತ್ತದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಸಚಿವರಾದ ಕೆ.ಎಚ್. ಮುನಿಯಪ್ಪ, ಕೆ. ವೆಂಕಟೇಶ್, ಆರ್.ಬಿ. ತಿಮ್ಮಾಪುರ, ಎನ್. ಚಲುವರಾಯಸ್ವಾಮಿ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಪಶು ಮತ್ತು ಕುಕ್ಕುಟ ಆಹಾರ ಉತ್ಪಾದಕರ ಸಂಘದ ಪ್ರತಿನಿಧಿಗಳು ಸಭೆಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.