ಸಿದ್ದರಾಮಯ್ಯ
ಬೆಂಗಳೂರು: ‘ಕೇಂದ್ರ ಸರ್ಕಾರ ನಿಗದಿಪಡಿಸಿರುವ ₹ 2,400 ಕನಿಷ್ಠ ಬೆಂಬಲ ಬೆಲೆಯಲ್ಲಿ ಪಶು ಹಾಗೂ ಕೋಳಿ ಆಹಾರ ಉತ್ಪಾದಕರು ರೈತರಿಂದ ಮೆಕ್ಕೆಜೋಳ ಖರೀದಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪಶು ಮತ್ತು ಕೋಳಿ ಆಹಾರ ಉತ್ಪಾದಕರ ಜೊತೆ ಸೋಮವಾರ ಸಭೆ ನಡೆಸಿದ ಅವರು, ‘ರಾಜ್ಯದಲ್ಲಿ ಈ ವರ್ಷ ಅತ್ಯಧಿಕ ಪ್ರಮಾಣದಲ್ಲಿ ಮೆಕ್ಕೆಜೋಳ ಉತ್ಪಾದನೆಯಾಗಿದೆ. ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ದರ ಕುಸಿದಿರುವುದರಿಂದ ರೈತರಿಗೆ ನೆರವಾಗಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ’ ಎಂದರು.
‘ಡಿಸ್ಟಿಲರಿಗಳು 7 ಲಕ್ಷ ಟನ್ ಮೆಕ್ಕೆಜೋಳ ಖರೀದಿ ಪ್ರಕ್ರಿಯೆಯನ್ನು ಈಗಾಗಲೇ ಆರಂಭಿಸಿವೆ. ಕೆಎಂಎಫ್ 50 ಸಾವಿರ ಟನ್ ಖರೀದಿಸಲಿದೆ. ಪಶು ಮತ್ತು ಕೋಳಿ ಆಹಾರ ಉತ್ಪಾದನಾ ವಲಯ ಕೂಡಾ ತಕ್ಷಣ 5 ಲಕ್ಷ ಟನ್ ಮೆಕ್ಕೆಜೋಳ ಖರೀದಿಸಬೇಕು’ ಎಂದು ಸೂಚನೆ ನೀಡಿದರು.
‘ಕರ್ನಾಟಕ ಮಾರುಕಟ್ಟೆ ಫೆಡರೇಶನ್ ಮೂಲಕ ರೈತರಿಂದ ಮೆಕ್ಕೆಜೋಳ ಖರೀದಿಸಿ ಸರಬರಾಜು ಮಾಡಲಾಗುವುದು. ಸಾಗಣೆ ವೆಚ್ಚ, ಲೋಡಿಂಗ್, ಅನ್ಲೋಡಿಂಗ್ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಕೋಳಿ ಉದ್ಯಮಕ್ಕೆ ಯಾವುದೇ ತೊಂದರೆ ಆಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದರು.
‘ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ 17.6 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬಿತ್ತನೆಯಾಗಿದ್ದು, 53.8 ಲಕ್ಷ ಮೆಕ್ಕೆಜೋಳ ಉತ್ಪಾದನೆ ಅಂದಾಜಿಸಲಾಗಿದೆ. ಇದರಲ್ಲಿ ಶೇ 50ರಿಂದ 60ರಷ್ಟು ಮೆಕ್ಕೆಜೋಳವನ್ನು ಕೋಳಿ ಮತ್ತು ಪಶು ಆಹಾರಕ್ಕೆ ಉಪಯೋಗಿಸಲಾಗುತ್ತದೆ. ಪ್ರತಿವರ್ಷ ಅಂದಾಜು 25.89 ಲಕ್ಷ ಟನ್ ಮೆಕ್ಕೆಜೋಳವನ್ನು ಕೋಳಿ ಮತ್ತು ಪಶು ಆಹಾರಕ್ಕೆ ಬಳಸಲಾಗುತ್ತದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಸಚಿವರಾದ ಕೆ.ಎಚ್. ಮುನಿಯಪ್ಪ, ಕೆ. ವೆಂಕಟೇಶ್, ಆರ್.ಬಿ. ತಿಮ್ಮಾಪುರ, ಎನ್. ಚಲುವರಾಯಸ್ವಾಮಿ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಪಶು ಮತ್ತು ಕುಕ್ಕುಟ ಆಹಾರ ಉತ್ಪಾದಕರ ಸಂಘದ ಪ್ರತಿನಿಧಿಗಳು ಸಭೆಯಲ್ಲಿದ್ದರು.
ಹಾವೇರಿ/ಗದಗ: ‘ಖರೀದಿ ಕೇಂದ್ರಗಳನ್ನು ಆರಂಭಿಸಿ ಬೆಂಬಲ ಬೆಲೆಯಡಿ ಮೆಕ್ಕೆಜೋಳವನ್ನು ಖರೀದಿಸಲು ಆಗ್ರಹಿಸಿ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸೋಮವಾರ ಹಾವೇರಿಯಲ್ಲಿ ಎಂಟನೇ ದಿನಕ್ಕೆ, ಗದಗನಲ್ಲಿ ಹದಿನೇಳನೇ ದಿನಕ್ಕೆ ಕಾಲಿರಿಸಿತು.
‘ಪ್ರತಿ ರೈತರಿಂದ ಗರಿಷ್ಠ 5 ಕ್ವಿಂಟಲ್ ಮೆಕ್ಕೆಜೋಳ ವನ್ನು ಕ್ವಿಂಟಲ್ಗೆ ₹ 2,400 ಬೆಂಬಲ ಬೆಲೆಯಡಿ ಖರೀದಿಸಬೇಕು’ ಎಂದು ರಾಜ್ಯ ಸರ್ಕಾರ ಹೊರಡಿಸಿದ ಆದೇಶ ಪ್ರತಿಗಳನ್ನು ರೈತರು ಸುಟ್ಟು ಪ್ರತಿಭಟಿಸಿದರು. ಮೆಕ್ಕೆಜೋಳವನ್ನು ಪ್ರತಿ ಕ್ವಿಂಟಲ್ಗೆ ₹ 3,000 ದರದಲ್ಲಿ ಖರೀದಿಸಬೇಕು. ಖರೀದಿ ಕೇಂದ್ರಗಳನ್ನು ಆರಂಭಿಸಬೇಕು’ ಎಂದು ರೈತರು ಆಗ್ರಹಿಸಿದರು.
‘ಹಾವೇರಿ ಜಿಲ್ಲೆಯಲ್ಲಿ ಅಂದಾಜು 11 ಲಕ್ಷಕ್ಕೂ ಹೆಚ್ಚು ಕ್ವಿಂಟಲ್ ಮೆಕ್ಕೆಜೋಳ ಬೆಳೆಯಲಾಗಿದೆ. ಈ ಆದೇಶದಿಂದ ಪ್ರಯೋಜನವಾಗದು’ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ರೈತರು ಟಯರ್ಗಳಿಗೆ ಬೆಂಕಿ ಹಚ್ಚಿ, ಆಕ್ರೋಶ ವ್ಯಕ್ತಪಡಿಸಿ ದರು. ಖರೀದಿ ಕೇಂದ್ರ ಆರಂಭಿಸುವವರೆಗೂ ಪ್ರತಿಭಟನೆ ಹಿಂಪಡೆಯಲ್ಲ ಎಂದು ಎಚ್ಚರಿಸಿದರು.
ಖರೀದಿ ಕೇಂದ್ರ ಆರಂಭಿಸುವ ಭರವಸೆ ಸಿಕ್ಕಿದ್ದ ಕಾರಣ, ರೈತರು ಧರಣಿ ಸ್ಥಳದಲ್ಲಿ ವಿಜಯೋತ್ಸವ ಆಚರಿಸಲು ನಿರ್ಧರಿಸಿದ್ದರು. ಆದರೆ, ಖರೀದಿ ಕೇಂದ್ರ ಆರಂಭಗೊಳ್ಳದ ಕಾರಣ ಪಾಲಾ-ಬಾದಾಮಿ ಹೆದ್ದಾರಿಯಲ್ಲಿ ಟಯರ್ಗಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.