ADVERTISEMENT

ನಿರ್ಮಲಾನಂದನಾಥ ಸ್ವಾಮೀಜಿ ಹೆಗಲ ಮೇಲೆ ಕೈ: ಸಚಿವ ಅಶೋಕ ವಿರುದ್ಧ ಆಕ್ರೋಶ

ಕೆಂಪೇಗೌಡರ ಪ್ರತಿಮೆ ಅನಾವರಣ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2022, 19:31 IST
Last Updated 12 ನವೆಂಬರ್ 2022, 19:31 IST
ಕಂದಾಯ ಸಚಿವ ಆರ್‌. ಅಶೋಕ ಅವರು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿಯವರ ಹೆಗಲ ಮೇಲೆ ಕೈ ಇರಿಸಿರುವ ದೃಶ್ಯ
ಕಂದಾಯ ಸಚಿವ ಆರ್‌. ಅಶೋಕ ಅವರು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿಯವರ ಹೆಗಲ ಮೇಲೆ ಕೈ ಇರಿಸಿರುವ ದೃಶ್ಯ   

ಬೆಂಗಳೂರು: ಕೆಂಪೇಗೌಡರ ಪ್ರತಿಮೆ ಅನಾವರಣ ಸಮಾರಂಭದ ಬಳಿಕ ಗುಂಪು ಫೋಟೊ ತೆಗೆಸಿಕೊಳ್ಳುವಾಗ ಕಂದಾಯ ಸಚಿವ ಆರ್‌. ಅಶೋಕ ಅವರು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿಯವರ ಹೆಗಲ ಮೇಲೆ ಕೈ ಇರಿಸಿರುವುದನ್ನು ಜೆಡಿಎಸ್, ಕಾಂಗ್ರೆಸ್‌ ಟೀಕಿಸಿವೆ.

ಜೆಡಿಎಸ್‌ ವರಿಷ್ಠ ದೇವೇಗೌಡರು ಪಟ್ಟನಾಯಕನಹಳ್ಳಿ ಗುರುಗುಂಡ ಬ್ರಹ್ಮೇಶ್ವರ ಮಠದ ನಂಜಾವಧೂತ ಸ್ವಾಮೀಜಿ ಕಾಲಿಗೆರಗಿರುವ ಹಾಗೂ ಅಶೋಕ ಅವರು ನಿರ್ಮಲಾನಂದನಾಥ ಸ್ವಾಮೀಜಿ ಹೆಗಲ ಮೇಲೆ ಕೈ ಇರಿಸಿರುವ ಫೋಟೊಗಳನ್ನು ಹಂಚಿಕೊಂಡಿರುವ ಜೆಡಿಎಸ್‌ ವಕ್ತಾರ ಗಂಗಾಧರಮೂರ್ತಿ, ಕಂದಾಯ ಸಚಿವರ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

ಈ ಘಟನೆ ಕುರಿತು ಸುದ್ದಿಗಾರರಿಗೆ ಶನಿವಾರ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ‘ನಾನು ಸ್ವಾಮೀಜಿಯ ಹೆಸರನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದಿಲ್ಲ. ನಮ್ಮ ಸ್ವಾಮೀಜಿಯನ್ನು ನಾವು ದೇವರಂತೆ ಕಾಣುತ್ತೇವೆ. ಅವರು ವಯಸ್ಸಿನಲ್ಲಿ ನನಗಿಂತ ಸ್ವಲ್ಪ ಚಿಕ್ಕವರಾದರೂ ಆ ಪವಿತ್ರ ಪೀಠಕ್ಕೆ ಯಾವ ರೀತಿ ಗೌರವ ನೀಡಬೇಕೋ ಆ ರೀತಿ ನೀಡುತ್ತೇವೆ’ ಎಂದರು.

ADVERTISEMENT

ಸಾಮಾಜಿಕ ಮಾಧ್ಯಮಗಳಲ್ಲೂ ಫೋಟೊ ಹಂಚಿಕೊಂಡಿರುವ ಹಲವಾರು ಮಂದಿ, ಅಶೋಕ ವಿರುದ್ಧ ಹರಿಹಾಯ್ದಿದ್ದಾರೆ. ಆದರೆ, ಕಾಂಗ್ರೆಸ್‌ ಮುಖಂಡ ವಿ.ಎಸ್‌. ಉಗ್ರಪ್ಪ ಅವರು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿಯವರ ಹೆಗಲ ಮೇಲೆ ಕೈಹಾಕಿದ್ದ ಚಿತ್ರವೊಂದನ್ನು ಅಶೋಕ ಆಪ್ತರು ಹಂಚಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.