ADVERTISEMENT

ಬಿಬಿಸಿ ಕಚೇರಿ ಮೇಲೆ ಐಟಿ ದಾಳಿ: ಬೆಂಗಳೂರು ಪ್ರೆಸ್‌ ಕ್ಲಬ್‌ ಖಂಡನೆ

ಇದು ಮಾಧ್ಯಮಗಳನ್ನು ಹತ್ತಿಕ್ಕುವ ಪ್ರಯತ್ನ ಎಂದು ಪ್ರೆಸ್‌ಕ್ಲಬ್‌ ಕಿಡಿ ಕಾರಿದೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2023, 15:20 IST
Last Updated 14 ಫೆಬ್ರುವರಿ 2023, 15:20 IST
   

ಬೆಂಗಳೂರು: ಬಿಬಿಸಿ ಸುದ್ದಿ ವಾಹಿನಿಯ ದೆಹಲಿ ಹಾಗೂ ಮುಂಬೈ ಕಚೇರಿಯಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧ ಕಾರ್ಯಕ್ಕೆ ಬೆಂಗಳೂರು ಪ್ರೆಸ್‌ ಕ್ಲಬ್‌ ತೀವ್ರ ಖಂಡನೆ ವ್ಯಕ್ತಪಡಿಸಿದೆ.

ಇದು ಮಾಧ್ಯಮಗಳನ್ನು ಹತ್ತಿಕ್ಕುವ ಪ್ರಯತ್ನ ಎಂದು ಪ್ರೆಸ್‌ಕ್ಲಬ್‌ ಕಿಡಿ ಕಾರಿದೆ.

ಈ ಬಗ್ಗೆ ಬೆಂಗಳೂರು ಪ್ರೆಸ್‌ ಕ್ಲಬ್‌ ಅಧ್ಯಕ್ಷ ಆರ್‌. ಶ್ರೀಧರ ಹಾಗೂ ಪ್ರಧಾನ ಕಾರ್ಯದರ್ಶಿ ಬಿ.ಪಿ ಮಲ್ಲಪ್ಪ ಅವರು ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ADVERTISEMENT

‘ಭಾರತ ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದ್ದು, ಇಲ್ಲಿ ಪ್ರತಿಯೊಬ್ಬರಿಗೂ ಅವರ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಸ್ವಾತಂತ್ರ್ಯವಿದೆ. ಅದರಲ್ಲೂ ವಿಶೇಷವಾಗಿ ಮಾಧ್ಯಮಗಳು ಸ್ವತಂತ್ರ್ಯವಾಗಿ ಅಭಿಪ್ರಾಯ ವ್ಯಕ್ತಪಡಿಸುತ್ತ, ಸಮಾಜವನ್ನು ಸರಿದಾರಿಯಲ್ಲಿ ನಡೆಯಲು ಸಹಕಾರಿಯಾಗಿದೆ. ಅಂತಹದರಲ್ಲಿ ಇದೀಗ ಪ್ರತಿಷ್ಠಿತ ಬಿಬಿಸಿ ಮಾಧ್ಯಮದ ದೆಹಲಿ ಕಚೇರಿ ಮೇಲೆ ಐಟಿ ಶೋಧ ಮಾಡಿರುವುದು ತೀವ್ರ ಖಂಡನೀಯ‘ ಎಂದು ಹೇಳಿದ್ದಾರೆ.

ಕಾರ್ಯಕ್ರಮವೊಂದನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನುವುದು ಇಲ್ಲಿ ಸ್ಪಷ್ಟವಾಗುತ್ತದೆ ಎಂದು ನುಡಿದಿರುವ ಅವರು, ಮಾಧ್ಯಮಗಳನ್ನು ಹತ್ತಿಕ್ಕಲು ನಡೆಸುವ ಈ ಪ್ರಯತ್ನವನ್ನು ಖಂಡಿಸುತ್ತೇವೆ ಎಂದು ಹೇಳಿದ್ದಾರೆ.

ಭಾರತೀಯ ಪ್ರೆಸ್‌ ಕ್ಲಬ್‌ ಕೂಡ ಬಿಬಿಸಿ ಮೇಲಿನ ಐಟಿ ಶೋಧವನ್ನು ಖಂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.