ADVERTISEMENT

ರಾಜ್ಯದಲ್ಲಿ ಅಲ್ಲಲ್ಲಿ ಮಳೆ: ಮೂರು ಸೇತುವೆ ಜಲಾವೃತ

​ಪ್ರಜಾವಾಣಿ ವಾರ್ತೆ
Published 1 ಜುಲೈ 2019, 18:37 IST
Last Updated 1 ಜುಲೈ 2019, 18:37 IST
ಹುಬ್ಬಳ್ಳಿ ಗದಗ ರಸ್ತೆಯ ಯುನೈಟೆಡ್‌ ಆಂಧ್ರ ಅಸೋಸಿಯೇಶನ್ಸ್‌ ತೆಲುಗು ಪ್ರಾಥಮಿಕ ಹಾಗೂ ಪ್ರೌಢಶಾಲೆ ಮೈದಾನದಲ್ಲಿ ನಿಂತ ಮಳೆ ನೀರಿನಲ್ಲಿ ಮಕ್ಕಳು ಆಟದಲ್ಲಿ ತೊಡಗಿದರು ಪ್ರಜಾವಾಣಿ ಚಿತ್ರ: ತಾಜುದ್ದೀನ್‌ ಆಜಾದ್‌
ಹುಬ್ಬಳ್ಳಿ ಗದಗ ರಸ್ತೆಯ ಯುನೈಟೆಡ್‌ ಆಂಧ್ರ ಅಸೋಸಿಯೇಶನ್ಸ್‌ ತೆಲುಗು ಪ್ರಾಥಮಿಕ ಹಾಗೂ ಪ್ರೌಢಶಾಲೆ ಮೈದಾನದಲ್ಲಿ ನಿಂತ ಮಳೆ ನೀರಿನಲ್ಲಿ ಮಕ್ಕಳು ಆಟದಲ್ಲಿ ತೊಡಗಿದರು ಪ್ರಜಾವಾಣಿ ಚಿತ್ರ: ತಾಜುದ್ದೀನ್‌ ಆಜಾದ್‌   

ಬೆಂಗಳೂರು: ರಾಜ್ಯದ ಮಲೆನಾಡು ಸೇರಿದಂತೆ ಎಲ್ಲೆಡೆ ಮುಂಗಾರು ಮಳೆ ಕ್ಷೀಣಿಸಿದೆ. ಆದರೆ, ನೆರೆಯ ಮಹಾ
ರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಕೃಷ್ಣಾ ಹಾಗೂ ಅದರ ಉಪನದಿಗಳ ಒಳಹರಿವು ಹೆಚ್ಚಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ರಸ್ತೆ ಮಟ್ಟದ ಮೂರು ಸೇತುವೆಗಳ ಮೇಲೆ ನೀರು ಹರಿಯುತ್ತಿದೆ.

ಕೃಷ್ಣಾ ಮತ್ತು ಅದರ ಉಪನದಿಗಳಾದ ದೂಧ್‌ಗಂಗಾ, ವೇದಗಂಗಾ ಮತ್ತು ಪಂಚಗಂಗಾ ನದಿಗಳ ಒಳಹರಿವು ಹೆಚ್ಚಾಗಿದೆ. ಚಿಕ್ಕೋಡಿ ತಾಲ್ಲೂಕಿನ ಮಲಿಕವಾಡ ಹಾಗೂ ಮಹಾರಾಷ್ಟ್ರದ ದತ್ತವಾಡ ಗ್ರಾಮಗಳ ಮಧ್ಯೆ ಇರುವ ಸೇತುವೆ, ನಿಪ್ಪಾಣಿ ತಾಲ್ಲೂಕಿನ ಭೋಜವಾಡಿ-ಕುನ್ನೂರ ಗ್ರಾಮಗಳ ನಡುವಿನ ಸೇತುವೆ ಹಾಗೂ ಕಾರದಗಾ–ಭೋಜ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆಗಳ ಮೇಲೆ ನೀರು ಹರಿಯುತ್ತಿದೆ. ಈ ಸೇತುವೆಗಳಿಗೆ ಪರ್ಯಾಯ ಮಾರ್ಗಗಳಿದ್ದು, ಜನರ ಸಂಚಾರಕ್ಕೆ ಯಾವುದೇ ತೊಂದರೆಯಾಗಿಲ್ಲ.

ರಾಜಾಪುರ ಬ್ಯಾರೇಜ್‌ನಿಂದ 23 ಸಾವಿರ ಕ್ಯುಸೆಕ್‌ ನೀರು ಕೃಷ್ಣಾ ನದಿಗೆ ಸೇರುತ್ತಿದೆ. ರಾಜಾಪುರ ಬ್ಯಾರೇಜ್‌ನ ಎಲ್ಲ 36 ಗೇಟ್‌ಗಳನ್ನು ತೆರೆಯಲಾಗಿದೆ.

ADVERTISEMENT

ಮಳೆ ಕ್ಷೀಣ: ಎರಡು ದಿನಗಳಿಂದ ಸತತ ಸುರಿದ ಮಳೆ ಸೋಮವಾರ ಬಿಡುವು ನೀಡಿತ್ತು. ಬೆಳಗಾವಿ, ಉತ್ತರ ಕನ್ನಡ, ಹುಬ್ಬಳ್ಳಿ ಧಾರವಾಡದಲ್ಲಿ ಬೆಳಿಗ್ಗೆಯಿಂದಲೇ ಮೋಡ ಮುಸುಕಿದ ವಾತಾವರಣವಿತ್ತು. ವಿಜಯಪುರ ಹಾಗೂ ಜಿಲ್ಲೆಯ ತಿಕೋಟದಲ್ಲಿ ಮಳೆಯಾಗಿದೆ. ಕಾರವಾರದಲ್ಲಿ ಬೆಳಿಗ್ಗೆ 20 ನಿಮಿಷ ಸಾಧಾರಣ ಮಳೆ ಸುರಿದಿದೆ.

ಸಾಧಾರಣ ಮಳೆ: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ವಿವಿಧೆಡೆ ಸಾಧಾರಣ ಮಳೆಯಾಗಿದೆ.

ಮೂಡಿಗೆರೆ, ಕಳಸ, ಎನ್.ಆರ್‌.ಪುರ, ಕೊಪ್ಪ, ಶೃಂಗೇರಿ ಭಾಗದಲ್ಲಿ ಸಾಧಾರಣ ಮಳೆಯಾಗಿದೆ.ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಿಗ್ಗಾ ಮತ್ತು ಕೆರೆಕಟ್ಟೆಯಲ್ಲಿ ತಲಾ 53 ಮಿ.ಮೀ, ಹರಿಹರಪುರದಲ್ಲಿ 50 ಮಿ.ಮೀ ಮಳೆ
ಯಾಗಿದೆ. ತುಂಗಾ ನದಿಯ ಹರಿವು ತುಸು ಏರಿಕೆಯಾಗಿದೆ. ಕೊಟ್ಟಿಗೆಹಾರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಹದ ಮಳೆಯಾಗಿದೆ.

ಧಾರಾಕಾರ ಮಳೆ: ಕಲಬುರ್ಗಿಯಲ್ಲಿ ಸಂಜೆ ಒಂದು ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆಯಾಗಿದೆ.ಜಿಲ್ಲೆಯಅಫಜಲಪುರ ಮತ್ತು ಆಳಂದ ತಾಲ್ಲೂಕುಗಳಲ್ಲೂ ಉತ್ತಮ ಮಳೆಯಾಗಿದ್ದು, ಯಾದಗಿರಿಯಲ್ಲಿ ತುಂತುರು ಮಳೆಯಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.