ADVERTISEMENT

ಮಳೆಹಾನಿ: ತ್ವರಿತ ರಕ್ಷಣೆ, ಪರಿಹಾರಕ್ಕೆ ಬಸವರಾಜ ಬೊಮ್ಮಾಯಿ ಸೂಚನೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 15:59 IST
Last Updated 2 ಆಗಸ್ಟ್ 2022, 15:59 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಬೆಂಗಳೂರು: ಅತಿವೃಷ್ಟಿ ಮತ್ತು ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕುವ ಜನರನ್ನು ತ್ವರಿತವಾಗಿ ರಕ್ಷಣಾ ಕಾರ್ಯಾಚರಣೆ ಮೂಲಕ ಸ್ಥಳಾಂತರಿಸಿ, ಅಷ್ಟೇ ಶೀಘ್ರದಲ್ಲಿ ಪರಿಹಾರ ನೀಡುವ ಮೂಲಕ ನೆರವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆಬ ನಿರ್ದೇಶನ ನೀಡಿದರು.

ಮಳೆಹಾನಿ ಕುರಿತು 11 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮಂಗಳವಾರ ವಿಡಿಯೊ ಸಂವಾದ ನಡೆಸಿದ ಅವರು, ‘ತುರ್ತು ಸಂದರ್ಭಗಳಲ್ಲಿ ಪರಿಹಾರ ವಿತರಣೆಗೆ ವಿಳಂಬ ಮಾಡಬಾರದು. ಸರ್ಕಾರ ಜನರ ಕಷ್ಟಗಳಿಗೆ ಸ್ಪಂದಿಸುತ್ತಿದೆ ಎಂಬ ಸಂದೇಶ ರವಾನಿಸುವಂತೆ ಕೆಲಸ ಮಾಡಬೇಕು’ ಎಂದು ಸೂಚಿಸಿದರು.

ಪ್ರವಾಹದಲ್ಲಿ ಸಿಲುಕಿದವರನ್ನು ತುರ್ತಾಗಿ ಸ್ಥಳಾಂತರ ಮಾಡಬೇಕು. ಭೂಕುಸಿತ ಸಂಭವಿಸುವ ಸಾಧ್ಯತೆ ಇರುವ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಬೇಕು. ಮನೆ ಕುಸಿತದಿಂದ ತೊಂದರೆಗೆ ಸಿಲುಕಿದವರನ್ನು ಸ್ಥಳಾಂತರಿಸಿ, ತಾತ್ಕಾಲಿಕ ವಸತಿಗೆ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ADVERTISEMENT

ಮನೆ ಕುಸಿತದ ಪ್ರಕರಣಗಳಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿಗಳಿಂದ ತಕ್ಷಣ ವರದಿ ಪಡೆದು, ಸಂತ್ರಸ್ತರಿಗೆ ತುರ್ತು ನೆರವು ವಿತರಿಸಬೇಕು. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಿದುಹೋಗಿರುವ ರಸ್ತೆ ಸಂಪರ್ಕವನ್ನು ಸರಿಪಡಿಸಲು ಕ್ರಮ ಕೈಗೊಳ್ಳಬೇಕು. ‘ರೆಡ್‌ ಅಲರ್ಟ್‌’ ಇರುವ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಕೊಡಗು ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಬಹುದಾದ ಪ್ರದೇಶಗಳ ಮೇಲೆ ನಿಗಾ ಇಡಬೇಕು ಎಂದು ಮುಖ್ಯಮಂತ್ರಿ ನಿರ್ದೇಶನ ನೀಡಿದರು.

ಭಟ್ಕಳ, ಸುಳ್ಯ ಮತ್ತಿತರ ಪ್ರದೇಶಗಳಲ್ಲಿ ವಾಣಿಜ್ಯ ಸಂಕೀರ್ಣಗಳಿಗೆ ನೀರು ನುಗ್ಗಿರುವ ಕುರಿತು ವರದಿ ಸಲ್ಲಿಸಬೇಕು. ಕಾಳಜಿ ಕೇಂದ್ರಗಳಲ್ಲಿ ಸಮಸ್ಯೆಗಳಾಗದಂತೆ ತಹಶೀಲ್ದಾರ್‌ಗಳು ಎಚ್ಚರಿಕೆ ವಹಿಸಬೇಕು. ಮೈಸೂರು, ದಾವಣಗೆರೆ ಮತ್ತು ಉಡುಪಿ ಜಿಲ್ಲೆಗಳಿಗೆ ಮಳೆಹಾನಿ ಪರಿಹಾರ ಮತ್ತು ರಕ್ಷಣಾ ಕೆಲಸಗಳಿಗೆ ಹೆಚ್ಚುವರಿ ಅನುದಾನದ ಬಿಡುಗಡೆ ಮಾಡಲಾಗುವುದು. ಜಿಲ್ಲಾಧಿಕಾರಿಗಳು ಎಲ್ಲ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಕೆರೆಗಳ ಮೇಲೆ ನಿಗಾಕ್ಕೆ ಸೂಚನೆ

‘ಸತತ ಮಳೆಯಿಂದ ಎಲ್ಲ ಕೆರೆಗಳು ಭರ್ತಿಯಾಗಿವೆ. ಕೆರೆಗಳ ಕಟ್ಟೆಗಳು ಮತ್ತು ಕೋಡಿಗಳು ದುರ್ಬಲಗೊಂಡಿರುತ್ತವೆ. ಕೆರೆಗಳ ವಡ್ಡುಗಳು ಬಿರುಕು ಬಿಡದಂತೆ ಎಚ್ಚರಿಕೆ ವಹಿಸಬೇಕು. ಸಣ್ಣ ನೀರಾವರಿ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಜಂಟಿಯಾಗಿ ಕೆರೆಗಳ ಸ್ಥಿತಿ ಮೇಲೆ ನಿಗಾ ಇಡಬೇಕು’ ಎಂದು ಬೊಮ್ಮಾಯಿ ಸೂಚಿಸಿದರು.

ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ರಾಜ್ಯ ವಿಕೋಪ ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಸಭೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.