ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂಗಾರು ಬಿರುಸುಗೊಂಡಿರುವುದರಿಂದ ಈ ಭಾಗದ ಜಿಲ್ಲೆಗಳಲ್ಲಿ ಸೆ.5ರಿಂದ 9ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
11 ಜಿಲ್ಲೆಗಳಲ್ಲಿ'ಯೆಲ್ಲೊ ಅಲರ್ಟ್': ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ವ್ಯಾಪಕ ಮಳೆಯಾಗುವ ನಿರೀಕ್ಷೆ ಇರುವುದರಿಂದ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ.
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸೆ.6ರಿಂದ ಮಳೆ ಹೆಚ್ಚಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನಲ್ಲಿ ಮಳೆ ತಗ್ಗಿದ್ದು, ಕೆಲವೆಡೆ ಸಾಧಾರಣ ಮಳೆಯಾಗಬಹುದು ಎಂದು ತಿಳಿಸಿದೆ.
ಮಳೆ-ಎಲ್ಲಿ, ಎಷ್ಟು?: ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ 8 ಸೆಂ.ಮೀ ಗರಿಷ್ಠ ಮಳೆ ದಾಖಲಾಗಿದೆ. ರಾಣೆಬೆನ್ನೂರು 7, ಕಮಲಾಪುರ, ಅರಕಲಗೂಡು 5, ಕಂಪ್ಲಿ, ಹಾಸನ, ಹೊಸನಗರ 4, ಸಿಂಧನೂರು, ಶಿವಮೊಗ್ಗ, ಕೊಪ್ಪ, ಮಧುಗಿರಿ, ಚಳ್ಳಕೆರೆ 3, ನಿಪ್ಪಾಣಿ, ಕುಣಿಗಲ್, ನಂಜನಗೂಡು 2, ಮಾಗಡಿ, ಹೊಸಕೋಟೆ, ನೆಲಮಂಗಲ, ದಾವಣಗೆರೆ, ಗೌರಿಬಿದನೂರು, ಚಿಂತಾಮಣಿ, ಬೆಂಗಳೂರು, ತೀರ್ಥಹಳ್ಳಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.