ಬೆಂಗಳೂರು: ಮುಂಗಾರು ಮುಕ್ತಾಯವಾಗಿದ್ದರಿಂದ ರಾಜ್ಯದಾದ್ಯಂತ ಮಳೆ ತಗ್ಗಿದ್ದು, ಅ.29ರವರೆಗೆ ಮಳೆಯ ಪ್ರಮಾಣ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಐದು ದಿನಗಳವರೆಗೆ ಮಳೆಯಾಗುವ ಸೂಚನೆ ಇತ್ತು. ಅದರ ಪ್ರಭಾವ ತಗ್ಗಿರುವುದರಿಂದ ಮಳೆ ದಿಢೀರ್ ತಗ್ಗಿದೆ.
ಅ.29ರಿಂದ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಚಾಮರಾಜನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡಜಿಲ್ಲೆಗಳಲ್ಲಿ ಇದೇ 30ರಿಂದ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣವಾದ ಮಳೆಯಾಗಬಹುದು. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ.
ಮಳೆ–ಎಲ್ಲಿ, ಎಷ್ಟು?: ಬೆಳಗಾವಿ ಜಿಲ್ಲೆಯ ಲೊಂಡ ಹಾಗೂ ಆಗುಂಬೆಯಲ್ಲಿ ಮಂಗಳವಾರ ತಲಾ 5 ಸೆಂ.ಮೀ ಮಳೆಯಾಗಿದೆ. ಮೈಸೂರು 4, ಪುತ್ತೂರು, ಮಡಿಕೇರಿ 3, ಸುಳ್ಯ, ಪಾಂಡವಪುರ, ಶ್ರೀರಂಗಪಟ್ಟಣ, ಮಂಡ್ಯ 2, ಮೂಡುಬಿದರೆ, ಬೆಳ್ತಂಗಡಿ, ಮದ್ದೂರು, ಭದ್ರಾವತಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.ಶಿರಾಲಿಯಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಹಾಗೂ ಬೀದರ್ನಲ್ಲಿ 12 ಸೆಂ.ಮೀ ಕನಿಷ್ಠ ತಾಪಮಾನ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.