ADVERTISEMENT

ಕರಾವಳಿ ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್' ಘೋಷಣೆ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2020, 19:59 IST
Last Updated 18 ಸೆಪ್ಟೆಂಬರ್ 2020, 19:59 IST

ಬೆಂಗಳೂರು: ‘ರಾಜ್ಯದ ಕರಾವಳಿಯೆಡೆಗೆ ನೈರುತ್ಯ ಮುಂಗಾರು ಬಿರುಸುಗೊಂಡಿರುವುದರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದ್ದು, ಸೆ.20 ಮತ್ತು 21ರಂದು ಮೂರೂ ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ’ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು.

‘ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು’ ಎಂದು ಅವರು ಎಚ್ಚರಿಸಿದರು.

ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಅನ್ನು ಶನಿವಾರ ಘೋಷಿಸಲಾಗಿದೆ. ಬಾಗಲಕೋಟೆ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.

ADVERTISEMENT

ಮಳೆ-ಎಲ್ಲಿ, ಎಷ್ಟು?: ಆಗುಂಬೆಯಲ್ಲಿ ಗರಿಷ್ಠ 15 ಸೆಂ.ಮೀ ಮಳೆಯಾಗಿದೆ. ಮಂಗಳೂರು 10, ಕಾರವಾರ, ಭಟ್ಕಳ, ಬೀದರ್ 9, ಕುಂದಾಪುರ, ಕಾರ್ಕಳ 7, ಮೂಡುಬಿದರೆ 6, ಮಡಿಕೇರಿ 5, ಅಂಕೋಲಾ, ಸುಳ್ಯ, ಪುತ್ತೂರು, ಕೊಪ್ಪಳ, ಭಾಗಮಂಡಲ 4, ಕೊಪ್ಪ, ತೀರ್ಥಹಳ್ಳಿ 3, ಗಂಗಾವತಿ, ಬಾಗಲಕೋಟೆ, ಹೊಸಪೇಟೆ, ಸಕಲೇಶಪುರ 2, ದೇವನಹಳ್ಳಿ, ಹೊಸನಗರ, ಚಳ್ಳಕೆರೆ ಹಾಗೂ ಮೂಡಿಗೆರೆಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.