ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಆ.8 ಮತ್ತು 9ರಂದು ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಎರಡೂ ದಿನ ಭಾರಿ ಮಳೆಯ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.
ಕರಾವಳಿಯಲ್ಲಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು,3.6 ಮೀಟರ್ಗಳಷ್ಟು ಎತ್ತರದ ಅಲೆಗಳು ಏಳುವ ಸೂಚನೆ ಇರುವುದರಿಂದ ಮೀನುಗಾರರು ಇದೇ 11ರವರೆಗೆ ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.
ರಾಜ್ಯದ ಒಳನಾಡಿನಲ್ಲಿ ಆ.10ರಿಂದ 12ರವರೆಗೆ ಮಳೆ ಪ್ರಮಾಣ ಕಡಿಮೆ ಇರಲಿದೆ. ಈ ವೇಳೆ ಕೆಲವೆಡೆ ಸಾಧಾರಣ ಮಳೆಯಾಗಬಹುದು ಎಂದು ಮಾಹಿತಿ ನೀಡಿದೆ.
ಮಳೆ–ಎಲ್ಲಿ, ಎಷ್ಟು?: ಸುಬ್ರಹ್ಮಣ್ಯ ಮತ್ತು ಆಗುಂಬೆಯಲ್ಲಿ ಶನಿವಾರ ತಲಾ 10 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಮಡಿಕೇರಿ 9, ಬೆಳ್ತಂಗಡಿ 7, ಮೂಡುಬಿದರೆ 6, ಕಾರ್ಕಳ 5, ಕುಂದಾಪುರ, ಕೊಪ್ಪ 4, ಪುತ್ತೂರು, ಸುಳ್ಯ, ವಿರಾಜಪೇಟೆ, ರಾಮನಗರ 3, ಕಾರವಾರ, ಸಾಗರ, ಆನೇಕಲ್, ಕುಣಿಗಲ್ 2, ಮಂಗಳೂರು, ಭಟ್ಕಳ, ಶಿವಮೊಗ್ಗ, ತೀರ್ಥಹಳ್ಳಿ, ತರೀಕೆರೆ, ಹಾಸನ, ಸಕಲೇಶಪುರ, ನಂಜನಗೂಡು ಹಾಗೂ ಮಾಗಡಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.