ADVERTISEMENT

ನೇಕಾರರು, ಮೀನುಗಾರರ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ: ಸಿಎಂ

​ಪ್ರಜಾವಾಣಿ ವಾರ್ತೆ
Published 28 ಜುಲೈ 2022, 7:22 IST
Last Updated 28 ಜುಲೈ 2022, 7:22 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ರೈತ ವಿದ್ಯಾನಿಧಿ ಯೋಜನೆಯನ್ನು ನೇಕಾರರು, ಟ್ಯಾಕ್ಸಿ ಚಾಲಕರು, ಮೀನುಗಾರರ ಮಕ್ಕಳಿಗೆ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ತಮ್ಮ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಇದಕ್ಕೆ ಸಂಬಂಧಿಸಿದಂತೆ ಹಣಕಾಸು ಇಲಾಖೆಯಿಂದ ಒಪ್ಪಿಗೆ ಪಡೆದು ಆದೇಶ ಹೊರಡಿಸಲಾಗಿದೆ ಎಂದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ೭೫ ಯುನಿಟ್ ಉಚಿತ ವಿದ್ಯುತ್ ನೀಡುವ ಸಂಬಂಧ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ಪಾವತಿಯನ್ನು ಇವತ್ತಿನಿಂದಲೇ ಚಾಲನೆ ನೀಡಲಾಗಿದೆ ಎಂದರು.

ರಾಜ್ಯದಲ್ಲಿ ಮೊದಲಬಾರಿಗೆ ೮೦೦೦ ಶಾಲಾ ಕೊಠಡಿಗಳನ್ನು ನಿರ್ಮಿಸುವ ಕಾಮಗಾರಿಗೆ ಚಾಲನೆ ನೀಡಲಾಗುವುದು. ೧೦೦ ಪಿಎಚ್ ಸಿ ಗಳನ್ನು ಸಿಎಚ್ ಸಿಗಳಾಗಿ ಮೇಲ್ದರ್ಜೆಗೆ ಏರಿಸಲಾಗುವುದು. ಕಲ್ಯಾಣ ಕರ್ನಾಟಕದಲ್ಲಿ ೭೧ ಪಿಎಚ್ ಸಿ ಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಬೊಮ್ಮಾಯಿ ಹೇಳಿದರು.

ಮಹಿಳೆಯರಿಗಾಗಿ ಸ್ತ್ರೀಸಾಮರ್ಥ್ಯ, ಯುವಕರಿಗಾಗಿ ಯುವ ಶಕ್ತಿ ಯೋಜನೆ ಅನುಷ್ಠಾನಗೊಳಿಸಲಾಗುವುದು. ೨೮,೦೦೦ ಗ್ರಾಮಗಳಲ್ಲಿ ಸ್ವಾಮಿ ವಿವೇಕಾನಂದ ಸಂಘಗಳನ್ನು ಮಾಡಿ,ಉತ್ಪಾದನೆ ಮುಂತಾದ ಉದ್ಯಮ ಸಂಬಂಧಿ ತರಬೇತಿ ನೀಡಲಾಗುವುದು. ೫ ಲಕ್ಷ ಯುವಕರಿಗೆ ತರಬೇತಿ ನೀಡಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.