ಬೆಂಗಳೂರು: ‘ಅತ್ಯುತ್ತಮ ಸೇವೆ ಸಲ್ಲಿಸುವ ಗೃಹರಕ್ಷಕರನ್ನು ಪೊಲೀಸ್ ಇಲಾಖೆಗೆ ನೇರವಾಗಿ ನೇಮಕಾತಿ ಮಾಡಿಕೊಳ್ಳಲು ಗಮನಹರಿಸಬೇಕು’ ಎಂದುರಾಜ್ಯಪಾಲ ವಜುಭಾಯಿ ವಾಲಾ ಅವರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು.
ಅತ್ಯುತ್ತಮ ಸೇವೆ ಸಲ್ಲಿಸಿ ರಾಷ್ಟ್ರಪತಿ ಪದಕಕ್ಕೆ ಪಾತ್ರರಾದ ಅಗ್ನಿಶಾಮಕ ದಳ, ಗೃಹರಕ್ಷಕ ಹಾಗೂ ಪೌರ ರಕ್ಷಣಾ ಪಡೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಶುಕ್ರವಾರ ಪದಕ ಪ್ರದಾನ ಮಾಡಿ ಮಾತನಾಡಿದರು.
‘ಗೃಹರಕ್ಷಕರು ಪೊಲೀಸರ ರೀತಿಯಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮಹಿಳೆಯರೂ ಹೆಚ್ಚಿನ ಸಂಖ್ಯೆಯಲ್ಲಿ ಗೃಹರಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ. ಪೊಲೀಸ್ ಇಲಾಖೆಗೂ ನೆರವಾಗುತ್ತಿದ್ದಾರೆ’ ಎಂದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ, ‘ಪೊಲೀಸರ ಜೀವನ ಸುಧಾರಣೆಗೆ ಕ್ರಮಕೈಗೊಳ್ಳಲಾಗುವುದು’ ಎಂದರು.ರಾಜಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಅಗ್ನಿಶಾಮಕ ಪಡೆಯ ಡಿಜಿಪಿ ಎಂ.ಎನ್.ರೆಡ್ಡಿ, ಪೌರ ರಕ್ಷಣಾ ದಳದ ಮುಖ್ಯಸ್ಥ ಸುನಿಲ್ ಅಗರ್ವಾಲ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.