
ಚಿಂತಾಮಣಿ: ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಧಮ್ಕಿ ಹಾಕಿ ತಲೆಮರೆಸಿಕೊಂಡಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಇಲ್ಲಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶನಿವಾರ ವಜಾಗೊಳಿಸಿದೆ.
ರಾಜೀವ್ ಗೌಡ ಜ.17ರಂದು ವಕೀಲರ ಮೂಲಕ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಪ್ರಭಾರ ನ್ಯಾಯಾಧೀಶ ಕಾಂತರಾಜು ಜ. 22ರಂದು ವಿಚಾರಣೆ ಮುಗಿಸಿ, 24ರಂದು ತೀರ್ಪು ಕಾಯ್ದಿರಿಸಿದ್ದರು.
ರಾಜೀವ್ ಗೌಡ ಪರ ವಿವೇಕ ರೆಡ್ಡಿ ವಾದ ಮಂಡಿಸಿದರೆ, ಸರ್ಕಾರಿ ಅಭಿಯೋಜಕಿ ಸುಮತಿ ಶಾಂತಾ ಮೇರಿ ಜಾಮೀನು ಅರ್ಜಿ ವಿರೋಧಿಸಿ ವಾದ ಮಾಡಿದ್ದರು.
ಪೌರಾಯುಕ್ತೆ ಜಿ. ಅಮೃತ ಗೌಡ ಅವರು ರಾಜೀವ್ ಗೌಡ ವಿರುದ್ಧ ಶಿಡ್ಲಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ಬಿಎನ್ಎಸ್ ಸೆಕ್ಷನ್ 132, 224, 352, 351(3) ಮತ್ತು 56ರ ಅಡಿ ಎಫ್ಐಅರ್ ದಾಖಲಿಸಿದ್ದರು.
ಬಂಧನದಿಂದ ತಪ್ಪಿಸಿಕೊಳ್ಳಲು ರಾಜೀವ್ ಗೌಡ ತಲೆ ಮರೆಸಿಕೊಂಡಿದ್ದು, ವಕೀಲರ ಮೂಲಕ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.