ಶಿವಮೊಗ್ಗ: ‘ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ ಮೂರನೇ ಅಭ್ಯರ್ಥಿ ಲಹರ್ ಸಿಂಗ್ ಗೆಲ್ಲಲು ಹಾಗೂ ಕಾಂಗ್ರೆಸ್ ಪಕ್ಷದ ಮುಸ್ಲಿಂ ಅಭ್ಯರ್ಥಿ ಸೋಲಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರೇ ನೇರ ಕಾರಣ’ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಆರೋಪಿಸಿದರು.
‘ನಮ್ಮ ಪಕ್ಷದ ಮೂರನೇ ಅಭ್ಯರ್ಥಿ ಗೆಲ್ಲಲು ಕಾರಣರಾದ ಸಿದ್ದರಾಮಯ್ಯ ಅವರನ್ನೂ ಅಭಿನಂದಿಸುತ್ತೇನೆ’ ಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಟಾಂಗ್ ನೀಡಿದರು.
‘ಸಿದ್ದರಾಮಯ್ಯ ಯಾರ ಪರ ಇರುತ್ತಾರೆ ಎಂಬುದೇ ಗೊತ್ತಾಗುವುದಿಲ್ಲ. ವೀರಶೈವ ಮತ್ತು ಲಿಂಗಾಯತ ಸಮುದಾಯದವರನ್ನು ಒಡೆದರು. ಗೋ ಹತ್ಯೆ ನಿಷೇಧ ವಿರೋಧಿಸಿದರು. ಅವರು ಯಾರಿಗೂ ಒಳ್ಳೆಯದನ್ನು ಮಾಡಿಲ್ಲ. ಕಾಂಗ್ರೆಸ್ನ ಮುಸ್ಲಿಂ ಅಭ್ಯರ್ಥಿ ಮನ್ಸೂರ್ ಅವರ ಸೋಲಿಗೆ ಕಾರಣರಾದ ಸಿದ್ದರಾಮಯ್ಯ ಮುಸ್ಲಿಂ ಸಮುದಾಯಕ್ಕೆ ದ್ರೋಹ ಬಗೆದಿರುವುದನ್ನು ಆ ಸಮುದಾಯ ಅರ್ಥ ಮಾಡಿಕೊಳ್ಳಬೇಕು’ ಎಂದರು.
‘ನೂರಾರು ಕೋಟಿ ರೂಪಾಯಿ ವಹಿವಾಟು’
ರಾಜ್ಯಸಭೆ ಚುನಾವಣೆಯಲ್ಲಿ ನೂರಾರು ಕೋಟಿ ವಹಿವಾಟು ನಡೆದಿದೆ. ಸಿದ್ದರಾಮಯ್ಯ ಅವರ ಜಾತ್ಯತೀತ ಸಿದ್ಧಾಂತದ ಬಣ್ಣ ಬಯಲಾಗಿದೆ. ಈಗ ಅವರು ರಾಜ್ಯದ ಜನರ ಮುಂದೆ ಬೆತ್ತಲಾಗಿದ್ದಾರೆ. ಅಡ್ಡ ಮತದಾನ ಮಾಡಿ ರುವ ಶ್ರೀನಿವಾಸ ಗೌಡ ಮತ್ತು ಎಸ್.ಆರ್. ಶ್ರೀನಿವಾಸ್ ವಿರುದ್ಧ ವಿಧಾನಸಭೆ ಅಧ್ಯಕ್ಷರಿಗೆ ದೂರು ನೀಡುತ್ತೇನೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.