ನವದೆಹಲಿ: ಕರ್ನಾಟಕದಲ್ಲಿನ ರಾಜಕೀಯ ಬೆಳವಣಿಗೆ,ಉತ್ತರ ಪ್ರದೇಶದಲ್ಲಿ ನಡೆದಿರುವ ದಲಿತರ ಮೇಲಿನ ದೌರ್ಜನ್ಯ ಹಾಗೂ ಸಾಮೂಹಿಕ ಹಲ್ಲೆ ಕುರಿತು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟಿಸಿದ ವಿಪಕ್ಷ ಸದಸ್ಯರು ಕಲಾಪಕ್ಕೆ ಅಡ್ಡಿಪಡಿಸಿದ ಘಟನೆ ರಾಜ್ಯಸಭೆಯಲ್ಲಿ ಸೋಮವಾರ ನಡೆಯಿತು.
ಬೆಳಿಗ್ಗೆ ಕಲಾಪ ಆರಂಭ ಆಗುತ್ತಿದ್ದಂತೆಯೇ ಘೋಷಣೆ ಕೂಗಿದ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷದ ಸದಸ್ಯರಿಗೆ ಸೂಚನೆ ನೀಡಿದ ಸಭಾಪತಿ ಎಂ.ವೆಂಕಯ್ಯ ನಾಯ್ಡು, ಕರ್ನಾಟಕದ ಬೆಳವಣಿಗೆ ಕುರಿತ ಪ್ರಕರಣವು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಯ ಹಂತದಲ್ಲಿದ್ದು, ಆ ಕುರಿತು ಪ್ರಸ್ತಾಪಿಸದಿರುವಂತೆ ಹೇಳಿದರು.
ಆದರೂ ವಿಪಕ್ಷಗಳ ಪ್ರತಿಭಟನೆ ಮುಂದುವರಿದಿದ್ದರಿಂದ ಕಲಾಪವನ್ನು ಒಂದು ಗಂಟೆ ಅವಧಿಗೆ ಮುಂದೂಡಲಾಯಿತು.
ಕರ್ನಾಟಕದಲ್ಲಿ ಎದುರಾಗಿರುವ ಸಾಂವಿಧಾನಿಕ ಬಿಕ್ಕಟ್ಟಿನ ಕುರಿತು ಚರ್ಚಿಸಲು ನಿಯಮಾನುಸಾರ ಅನುಮತಿ ನೀಡುವಂತೆ ಕೋರಿ ನಿಲುವಳಿ ಸೂಚನೆ ಮಂಡಿಸಿದ ಕಾಂಗ್ರೆಸ್ ಸದಸ್ಯರು, ಮಧ್ಯಾಹ್ನ 12ಕ್ಕೂ ಪ್ರತಿಭಟನೆ ಮುಂದುವರಿಸಿದ್ದರಿಂದ ಮತ್ತೆ ಕಲಾಪವನ್ನು ಮುಂದೂಡಲಾಯಿತು.
ಮಧ್ಯಾಹ್ನ 2 ಗಂಟೆಗೂ ವಿಪಕ್ಷ ಸದಸ್ಯರು ಸದನದ ಬಾವಿಗಳಿದು ಗದ್ದಲ ಮುಂದುವರಿಸಿದ್ದರಿಂದ ಉಪ ಸಭಾಪತಿ ಹರಿವಂಶ್ ನಾರಾಯಣ ಸಿಂಗ್ ಅವರು ಮತ್ತೆ ಒಂದು ಗಂಟೆ ಕಾಲ ಕಲಾಪವನ್ನು ಮುಂದೂಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.