ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುವ ಸಂಬಂಧ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಸೋಮವಾರ ತಮ್ಮ ಅಭಿಪ್ರಾಯ ತಿಳಿಸಲಿದ್ದಾರೆ.
‘ರಾಷ್ಟ್ರದ ಹಿತದೃಷ್ಟಿಯಿಂದ ರಾಜ್ಯಸಭೆಗೆ ದೇವೇಗೌಡ ಪ್ರವೇಶ ಅತ್ಯಗತ್ಯ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಒಂದೇ ಸಾಲಿನ ನಿರ್ಣಯವನ್ನು ತೆಗೆದುಕೊಂಡಿತ್ತು. ಇದಕ್ಕೆ ದೇವೇಗೌಡರ ಒಪ್ಪಿಗೆ ಪಡೆಯುವುದಾಗಿ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದರು.
ದೇವೇಗೌಡರು ರಾಜ್ಯಸಭಾ ಪ್ರವೇಶದ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ಹಸಿರು ನಿಶಾನೆ ತೋರಿದ್ದು, ಗೌಡರೂ ಕಾಂಗ್ರೆಸ್ ಬೆಂಬಲದೊಂದಿಗೆ ರಾಜ್ಯಸಭೆ ಪ್ರವೇಶಿಸಲು ಮನಸ್ಸು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜೆಡಿಎಸ್ ಒಂದು ವೇಳೆ ದೇವೇಗೌಡರನ್ನಲ್ಲದೆ ಬೇರೆಯವರನ್ನು ಕಣಕ್ಕಿಳಿಸಿದರೆ ಬಿಜೆಪಿ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಸುವ ಸಾಧ್ಯತೆ ಇದೆ. ದೇವೇಗೌಡರು ಪ್ರವೇಶಿಸುವುದಾದರೆ, ಅಡ್ಡಿಪಡಿಸದಿರಲು ನಿರ್ಧರಿಸಿದೆ ಎಂದು ಬಿಜೆಪಿ ಮೂಲಗಳು ಹೇಳಿವೆ. ಮಂಗಳವಾರ ನಾಮಪತ್ರ ಸಲ್ಲಿಕೆಗೆ ಕಡೆ ದಿನವಾಗಿರುವುದರಿಂದ ಸೋಮವಾರ ಗೌಡರು ನಿರ್ಧಾರ ತಿಳಿಸಬೇಕಾಗಿದೆ. ನಾಳೆ ಗೌಡರ ಹೆಸರನ್ನು ಪಕ್ಷ ಪ್ರಕಟಿಸಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.