ಉಡುಪಿ: ಈ ವರ್ಷ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕದಿದ್ದರೂ ಅರ್ಹ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.
ಸೋಮವಾರ ಪ್ರೆಸ್ಕ್ಲಬ್ನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಸಂವಾದ ನಡೆಸಿದ ಸಚಿವರು, ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಹೊಸ ಸ್ಪರ್ಶ ನೀಡಲಾಗುತ್ತಿದ್ದು, ಈ ಸಂಬಂಧ ಮುಖ್ಯಮಂತ್ರಿ ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ 10 ದಿನಗಳಲ್ಲಿ ನಿಯಮಾವಳಿ ಸಿದ್ಧಪಡಿಸಲಾಗುವುದು. ರಾಜ್ಯೋತ್ಸವ ಪ್ರಶಸ್ತಿ ಹೇಗಿರಬೇಕು ಎಂದು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದರು.
ಆಡಳಿತಾತ್ಮಕ ಹಿತದೃಷ್ಟಿಯಿಂದ ಬೆಂಗಳೂರಿನಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಾಲ್ವರು ಜಂಟಿ ನಿರ್ದೇಶಕರನ್ನು ರಾಜ್ಯದ ನಾಲ್ಕು ಕಂದಾಯ ವಿಭಾಗಗಳಿಗೆ ನಿಯೋಜಿಸಿ ಜವಾಬ್ದಾರಿ ಹಂಚಿಕೆ ಮಾಡಲಾಗುವುದು ಎಂದು ಸಚಿವರು ಹೇಳಿದರು.
ಗ್ರಾಮೀಣ ಭಾಗದ ಕಲಾವಿದರು, ಹಿರಿಯ ಸಾಹಿತಿಗಳು ಸಚಿವರನ್ನು ಭೇಟಿಯಾಗಲು ವಿಧಾನಸೌಧಕ್ಕೆ ಬರಬೇಕಿತ್ತು. ಇನ್ಮುಂದೆ ವಾರದಲ್ಲಿ ಒಂದು ದಿನ ಎರಡು ಗಂಟೆ ರವೀಂದ್ರ ಕ್ಷೇತ್ರದಲ್ಲಿ ಇರಲಿದ್ದು, ಅಲ್ಲಿಯೇ ಭೇಟಿಮಾಡಿ ಅಹವಾಲು ಸಲ್ಲಿಸಬಹುದು ಎಂದರು.
ಇಂಧನ ಇಲಾಖೆಯನ್ನು ಪರಿಸರ ಸ್ನೇಹಿಯಾಗಿಸುವುದರ ಜತೆಗೆ, ಆಡಳಿತದಲ್ಲಿ ಜನಸ್ನೇಹಿ ನೀತಿಗಳಿಗೆ ಒತ್ತು ನೀಡಲಾಗುವುದು. ಗ್ರಾಹಕರು, ರೈತರು ಹಾಗೂ ಉದ್ಯಮಿಗಳಿಗೆ ಪೂರಕವಾದ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಂದಿನ 100 ದಿನಗಳಲ್ಲಿ ಯಾವ ದಿಕ್ಕಿನಲ್ಲಿ ಸಾಗಬೇಕು ಎಂಬ ಕುರಿತು ಸೆ.10ರಂದು ಕ್ರಿಯಾಯೋಜನೆ ತಯಾರಿಸಲಾಗುವುದು ಎಂದರು ಸಚಿವ ಸುನಿಲ್ ಕುಮಾರ್ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.