
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಾಲಿಕೆಗಳ ಚುನಾವಣೆ ತಯಾರಿ ಸಂಬಂಧ ಬಿಜೆಪಿಯ ಚುನಾವಣಾ ಉಸ್ತುವಾರಿ ರಾಮ್ ಮಾಧವ್ ಅವರು ಶನಿವಾರ ಮೊದಲ ಸಭೆ ನಡೆಸಲಿದ್ದಾರೆ.
ಚುನಾವಣಾ ಉಸ್ತುವಾರಿಯನ್ನಾಗಿ ಘೋಷಣೆ ಮಾಡಿದ ಬಳಿಕ ಅವರು ಸಹ ಉಸ್ತುವಾರಿಗಳಾದ ಸತೀಶ್ ಪೂನಿಯಾ ಮತ್ತು ಸಂಜಯ್ ಉಪಾಧ್ಯಾಯ ಅವರ ಜತೆ ಶುಕ್ರವಾರ ರಾತ್ರಿ ಬೆಂಗಳೂರಿಗೆ ಬಂದಿಳಿದರು.
ಪಕ್ಷದ ಕಚೇರಿಯಲ್ಲಿ ಬೆಳಿಗ್ಗೆ ಜಿಲ್ಲಾ ಘಟಕಗಳ ಪದಾಧಿಕಾರಿಗಳು, ನಗರದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸತ್ ಸದಸ್ಯರು, ಬಿಬಿಎಂಪಿಯ ಮಾಜಿ ಮೇಯರ್ಗಳ ಮತ್ತು ಮಾಜಿ ಕಾರ್ಪೊರೇಟರ್ಗಳ ಜತೆ ಅವರು ಸಭೆ ನಡೆಸಲಿದ್ದಾರೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೂ ಸಭೆಯಲ್ಲಿ ಭಾಗವಹಿಸುವರು ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಸಭೆ ಕುರಿತು ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ‘ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗಲೇ ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ ಗೆದ್ದಿತ್ತು. ಬೆಂಗಳೂರು ಜನರ ಮೇಲೆ ನಿರಂತರ ತೆರಿಗೆ ಹಾಕಿರುವುದರಿಂದ ಜನ ಕಾಂಗ್ರೆಸ್ಗೆ ಕಪಾಳ ಮೋಕ್ಷ ಮಾಡಲಿದ್ದಾರೆ. ಐದೂ ಪಾಲಿಕೆಗಳನ್ನು ಗೆಲ್ಲುವ ಸಂಬಂಧ ತಂತ್ರಗಾರಿಕೆ ಮಾಡಲಿದ್ದೇವೆ’ ಎಂದು ತಿಳಿಸಿದರು.
ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಳ್ಳುವುದಾಗಿ ಜೆಡಿಎಸ್ ನಾಯಕರಾದ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಈಗಾಗಲೇ ಪ್ರಕಟಿಸಿದ್ದಾರೆ. ಬಿಜೆಪಿಯಿಂದ ಈ ಕುರಿತು ಅಧಿಕೃತ ಪ್ರಕಟಣೆ ಹೊರಬೀಳಬೇಕಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.