ADVERTISEMENT

ಪಿಎಫ್‌ಐ ವಿರುದ್ಧದ ಯಾವುದೇ ಪ್ರಕರಣ ವಾಪಸ್‌ ಪಡೆದಿರಲಿಲ್ಲ: ರಾಮಲಿಂಗಾ ರೆಡ್ಡಿ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2022, 3:04 IST
Last Updated 8 ಅಕ್ಟೋಬರ್ 2022, 3:04 IST
ರಾಮಲಿಂಗಾ ರೆಡ್ಡಿ
ರಾಮಲಿಂಗಾ ರೆಡ್ಡಿ   

ಬೆಂಗಳೂರು: ಜೆಡಿಎಸ್‌–ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರವೂ ಸೇರಿದಂತೆ ಕಾಂಗ್ರೆಸ್‌ ಆಡಳಿತದ ಅವಧಿಯಲ್ಲಿ ಪಿಎಫ್‌ಐ ವಿರುದ್ಧ ಯಾವುದೇ ಪ್ರಕರಣವನ್ನೂ ವಾಪಸ್‌ ಪಡೆದಿರಲಿಲ್ಲ. ಈ ವಿಚಾರದಲ್ಲಿ ಬಿಜೆಪಿ ನಾಯಕರು ರಾಜಕಾರಣಕ್ಕಾಗಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಹೇಳಿದರು.

ಪಕ್ಷದ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಮ್ಮ ಅವಧಿಯಲ್ಲಿ ಯಾವುದೇ ಸಂಘಟನೆಯ ವಿರುದ್ಧದ ಪ್ರಕರಣ ವಾಪಸ್‌ ಪಡೆದಿರಲಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದಿರುವ ದಾಖಲೆಗಳಲ್ಲಿ ಅದಕ್ಕೆ ಸ್ಪಷ್ಟವಾದ ಆಧಾರವಿದೆ. ಬಿಜೆಪಿ ಬಳಿ ಆರೋಪಕ್ಕೆ ಪೂರಕವಾದ ದಾಖಲೆ ಇದ್ದರೆ ಬಹಿರಂಗಪಡಿಸಲಿ’ ಎಂದು ಸವಾಲು ಹಾಕಿದರು.

ಕಾಂಗ್ರೆಸ್‌ ಅವಧಿಯಲ್ಲಿ 294 ಪ್ರಕರಣಗಳನ್ನು ಹಿಂಪಡೆಯಲಾಗಿತ್ತು. ಕೋಮು ಗಲಭೆಗಳು, ರೈತ ಚಳವಳಿಗಾರರು, ಸಾಹಿತಿಗಳು, ಕಾರ್ಮಿಕರು, ಪೌರ ಕಾರ್ಮಿಕರ ವಿರುದ್ಧದ ಪ್ರಕರಣಗಳನ್ನು ಮಾತ್ರ ವಿಚಾರಣೆಯಿಂದ ಹಿಂಪಡೆಯುವ ತೀರ್ಮಾನ ಮಾಡಲಾಗಿತ್ತು. ಯಾವುದೇ ಸಂಘಟನೆಯ ವಿರುದ್ಧ ದಾಖಲಾದ ಪ್ರಕರಣವನ್ನು ಹಿಂಪಡೆದಿಲ್ಲ ಎಂದರು.

ADVERTISEMENT

ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇರವಾಗಿ ಆರ್‌ಎಸ್‌ಎಸ್‌ ಮತ್ತು ಸಂಘ ಪರಿವಾರದ ಇತರ ಸಂಘಟನೆಗಳ ವಿರುದ್ಧದ ಪ್ರಕರಣಗಳನ್ನು ವಿಚಾರಣೆಯಿಂದ ಹಿಂದಕ್ಕೆ ಪಡೆಯಲಾಗಿದೆ. 2019ರಲ್ಲಿ 61, 2020ರಲ್ಲಿ 41 ಸೇರಿದಂತೆ ಸಂಘ ಪರಿವಾರದ ಮುಖಂಡರು, ಕಾರ್ಯಕರ್ತರ ವಿರುದ್ಧದ 100ಕ್ಕೂ ಹೆಚ್ಚು ಪ್ರಕರಣಗಳನ್ನು ಕೈಬಿಡಲಾಗಿದೆ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.