ADVERTISEMENT

ಮಗಳನ್ನು ಗೋವಾಕ್ಕೆ ಕಳುಹಿಸಿದ್ದೇ ಡಿ.ಕೆ.ಶಿವಕುಮಾರ್: ಯುವತಿ ಪೋಷಕರು

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2021, 19:26 IST
Last Updated 27 ಮಾರ್ಚ್ 2021, 19:26 IST
ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್   

ಬೆಂಗಳೂರು:ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಪಟ್ಟಿದ್ದು ಎನ್ನಲಾದ ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ (ಎಸ್ಐಟಿ) ಮುಂದೆ ಶನಿವಾರ ಹಾಜರಾಗಿರುವ ಸಿ.ಡಿ.ಯಲ್ಲಿದ್ದ ಯುವತಿಯಪೋಷಕರು, ಎಲ್ಲ ಸಾಕ್ಷ್ಯಗಳನ್ನು ಅಧಿಕಾರಿಗಳಿಗೆ ನೀಡಿರುವುದಾಗಿ ತಿಳಿಸಿದ್ದಾರೆ.

‘ನನ್ನ ಮಗಳನ್ನು ಮುಂದಿಟ್ಟುಕೊಂಡು ಡಿ.ಕೆ.ಶಿವಕುಮಾರ್ ಹೊಲಸು ರಾಜಕಾರಣ ಮಾಡುತ್ತಿದ್ದಾರೆ. ನನ್ನ ಮಗಳಿಗೆ ಹಾಗೂ ನನ್ನ ಕುಟುಂಬಕ್ಕೆ ಯಾವುದೇ ತೊಂದರೆಯಾದರೂ ಡಿ.ಕೆ. ಶಿವಕುಮಾರ್ ಅವರೇ ಹೊಣೆಗಾರರು’ ಎಂದು ಸಿ.ಡಿ.ಯಲ್ಲಿದ್ದಾಳೆ ಎನ್ನಲಾದ ಯುವತಿ ತಂದೆ ಹೇಳಿದರು.

ಎಸ್‌ಐಟಿ ಅಧಿಕಾರಿಗಳ ಎದುರು ಶನಿವಾರ ಹಾಜರಾಗಿ ಹೇಳಿಕೆ ನೀಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಗಳನ್ನು ನೆನೆದು ಕಣ್ಣೀರಿಟ್ಟರು. ಡಿ.ಕೆ. ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ‘ನನ್ನ ಮಗಳನ್ನು ಕರೆದುಕೊಂಡು ಬಂದು ಒಪ್ಪಿಸಿ’ ಎಂದು ಆಗ್ರಹಿಸಿದರು.

ADVERTISEMENT

ನಮ್ಮ ಬಳಿ ಸಾಕ್ಷ್ಯಗಳಿದ್ದು, ಅಧಿಕಾರಿಗಳಿಗೆ ನೀಡಿದ್ದೇವೆ ಎಂದು ಯುವತಿ ಪೋಷಕರು ಶನಿವಾರ ಸಂಜೆ ಸುದ್ದಿಗಾರರಿಗೆ ತಿಳಿಸಿದರು.

ಪ್ರಕರಣ ಸಂಬಂಧ ಮಾಹಿತಿ ಕಲೆಹಾಕಲು ಎಸ್ಐಟಿ ಅಧಿಕಾರಿಗಳು, ಯುವತಿ ಹಾಗೂ ಅವರ ಪೋಷಕರಿಗೆ ನೋಟಿಸ್ ನೀಡಿದ್ದರು.ಇದರಂತೆ ಶನಿವಾರ ಬೆಳಗ್ಗೆ ಯುವತಿಯ ತಂದೆ-ತಾಯಿ ಹಾಗೂ ಇಬ್ಬರು ಸಹೋದರರು ವಿಚಾರಣೆಗೆ ಹಾಜರಾಗಿದ್ದರು.

ಅಜ್ಞಾತ ಸ್ಥಳದಲ್ಲಿರುವ ಯುವತಿ, ಈಗಾಗಲೇ ನಾಲ್ಕು ವಿಡಿಯೊ ಹರಿಬಿಟ್ಟಿದ್ದಾರೆ. ಆದರೆ ತಮ್ಮ ಮಗಳು ಎಲ್ಲಿ ಇದ್ದಾರೆ ಎಂಬುದು ತಿಳಿದಿಲ್ಲ ಎಂದು ಯುವತಿ ಪೋಷಕರು ಆರೋಪಿಸಿದ್ದಾರೆ.

ಇವುಗಳನ್ನೂ ಓದಿ:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.