ರಾಮನಗರ: ರಮೇಶ ಜಾರಕಿಹೊಳಿ ವಿರುದ್ಧ ದೂರು ನೀಡಿರುವ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರಿಗೆ ಬೆದರಿಕೆ ಕರೆಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಕನಕಪುರ ತಾಲ್ಲೂಕಿನ ಕಲ್ಲಹಳ್ಳಿಯಲ್ಲಿ ಇರುವ ಅವರ ನಿವಾಸಕ್ಕೆ ಪೊಲೀಸರು ಬುಧವಾರ ಭದ್ರತೆ ಒದಗಿಸಿದ್ದಾರೆ.
‘ನಾನು ನೀಡಿರುವ ದೂರಿನಿಂದ ಜಾರಕಿಹೊಳಿ ಬೆಂಬಲಿಗರು ಆಕ್ರೋಶ
ಗೊಂಡಿದ್ದು, ದೂರವಾಣಿ ಕರೆಗಳ ಮೂಲಕ ನನಗೆ ಜೀವ ಬೆದರಿಕೆ ಒಡ್ಡುತ್ತಿದ್ದಾರೆ. ಅಲ್ಲದೇ ನಾನು ಓಡಾಡುವ ಸ್ಥಳಗಳಲ್ಲಿ ಅಪರಿಚಿತರ ಗುಂಪು ನನ್ನನ್ನು ಹಿಂಬಾಲಿಸುತ್ತಿದ್ದು, ನಾನು ಹಾಗೂ ನನ್ನ ಕುಟುಂಬದವರಿಗೆ ಭಯ ಹುಟ್ಟಿಸಲು ಯತ್ನಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಗತ್ಯ ಭದ್ರತೆ ಒದಗಿಸಬೇಕು’ ಎಂದು ಕೋರಿ ಅವರು ಬುಧವಾರ ಸಂಜೆ ಕನಕಪುರ ಗ್ರಾಮೀಣ ಠಾಣೆಯಲ್ಲಿ ದೂರು ಸಲ್ಲಿಸಿದರು.
***
ಬೆದರಿಕೆ ಹಿನ್ನೆಲೆಯಲ್ಲಿ ರಕ್ಷಣೆ ಒದಗಿಸುವಂತೆ ದಿನೇಶ್ ಕೋರಿದ್ದಾರೆ. ಪ್ರಕರಣದ ಸ್ವರೂಪ ಆಧರಿಸಿ ಕ್ರಮ ಕೈಗೊಳ್ಳುತ್ತೇವೆ
- ಗಿರೀಶ್, ಎಸ್ಪಿ, ರಾಮನಗರ
***
ಇಂದು ವಿಚಾರಣೆ
ಪ್ರಕರಣ ಸಂಬಂಧ 4ರಂದು ಬೆಳಿಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಕಬ್ಬನ್ಪಾರ್ಕ್ ಠಾಣೆ ಪೊಲೀಸರು ದೂರುದಾರ ದಿನೇಶ್ ಅವರಿಗೆ ಬುಧವಾರ ನೋಟಿಸ್ ನೀಡಿದ್ದಾರೆ.
‘ಇನ್ನಷ್ಟು ಸಿ.ಡಿ ನನ್ನ ಬಳಿ ಇವೆ’
ಪ್ರಕರಣ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ದಿನೇಶ್ ‘ಪ್ರಕರಣವನ್ನು ಸ್ವತಂತ್ರ ತನಿಖಾ ಸಂಸ್ಥೆಗಳ ಮೂಲಕವೇ ತನಿಖೆ ನಡೆಸುವಂತೆ ಒತ್ತಾಯಿಸಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗುವುದು’ ಎಂದು ತಿಳಿಸಿದರು.
‘ಮುಖ್ಯಮಂತ್ರಿಗಳು ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆದಿರುವುದು ಸ್ವಾಗತಾರ್ಹ. ರಾಜ್ಯದ ಕೆಲವು ಸಚಿವರು, ಹಲವು ಪ್ರಭಾವಿ ರಾಜಕಾರಣಿಗಳ ಅಕ್ರಮಗಳ ದಾಖಲೆಗಳೂ ನನ್ನಲ್ಲಿ ಇವೆ. ಅವುಗಳನ್ನು ಸೂಕ್ತ ಸಂದರ್ಭದಲ್ಲಿ ಬಹಿರಂಗಪಡಿಸುತ್ತೇನೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.