ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ರಾಜ್ಯಕ್ಕೆ ಸೋಮವಾರ ಬಂದಿರುವ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ತಾವು ವಾಸ್ತವ್ಯ ಹೂಡಿರುವ ತಾಜ್ ವೆಸ್ಟೆಂಡ್ ಹೋಟೆಲ್ಗೆ ಕೆಲವು ನಾಯಕರನ್ನು ಕರೆಯಿಸಿಕೊಂಡು ಚರ್ಚೆ ನಡೆಸಿದರು.
ಮಂಗಳವಾರವೂ ಕೆಲವು ನಾಯಕರ ಜೊತೆ ಅನೌಪಚಾರಿಕವಾಗಿ ಸಮಾಲೋಚನೆ ನಡೆಸಲಿರುವ ಅವರು, ಸಚಿವರು, ಶಾಸಕರು, ಜಿಲ್ಲಾ ಘಟಕಗಳ ಅಧ್ಯಕ್ಷರು ಮತ್ತು ಇತರ ಪ್ರಮುಖ ನಾಯಕರ ಜೊತೆ ಬುಧವಾರ (ಜ. 10) ಚರ್ಚೆ ನಡೆಸಲಿದ್ದಾರೆ.
‘ಲೋಕಸಭೆ ಚುನಾವಣೆಗೂ ಮೊದಲು ನಿಗಮ ಮಂಡಳಿಗಳಿಗೆ ನೇಮಕಾತಿ ನಡೆಯಬೇಕೆಂಬ ಒತ್ತಡವಿದೆ. ಆದರೆ, ಈಗಾಗಲೇ ಸಿದ್ಧಪಡಿಸಿರುವ ಪಟ್ಟಿಯ ಬಗ್ಗೆ ಕೆಲವು ಶಾಸಕರು ಮತ್ತು ನಿಗಮ ಮಂಡಳಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆ ಮುನಿಸು ತಣಿಸುವ ಕೆಲಸವನ್ನು ಸುರ್ಜೇವಾಲ ಮೊದಲು ಮಾಡಲಿದ್ದಾರೆ’ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಲೋಕಸಭೆ ಚುನಾವಣೆಯಲ್ಲಿ ಕನಿಷ್ಠ 20 ಸೀಟುಗಳನ್ನು ಗೆಲ್ಲಬೇಕೆಂಬ ಗುರಿಯನ್ನು ಪಕ್ಷ ಇಟ್ಟುಕೊಂಡಿದೆ. ಅದಕ್ಕೆ ಪೂರಕವಾಗಿ ಜನವರಿ ಅಂತ್ಯದೊಳಗೆ ಕೆಲವು ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಪಕ್ಷ ಸಂಘಟನೆಯ ಜೊತೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಬಗ್ಗೆಯೂ ರಾಜ್ಯದ ನಾಯಕರ ಜೊತೆ ಸುರ್ಜೇವಾಲ ಚರ್ಚೆ ನಡೆಸಲಿದ್ದಾರೆ. ಬಹುತೇಕ ಕ್ಷೇತ್ರಗಳಿಗೆ ಎರಡು– ಮೂರು ಸಂಭವನೀಯ ಅಭ್ಯರ್ಥಿಗಳನ್ನು ಗುರುತಿಸಲಾಗಿದೆ. ಈ ಅಭ್ಯರ್ಥಿಗಳ ಬಗ್ಗೆಯೂ ಸ್ಥಳೀಯ ನಾಯಕರಿಂದ ಅಭಿಪ್ರಾಯ ಸಂಗ್ರಹ ನಡೆಯಲಿದೆ ಎಂದೂ ಮೂಲಗಳು ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.