ರಾಮಚಂದ್ರ ರಾವ್
ಬೆಂಗಳೂರು: ಡಿಜಿಪಿ ಕೆ.ರಾಮಚಂದ್ರ ರಾವ್ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿದ್ದ ಆದೇಶವನ್ನು ವಾಪಸ್ ಪಡೆದಿರುವ ರಾಜ್ಯ ಸರ್ಕಾರವು ಅವರಿಗೆ ಹುದ್ದೆ ನೀಡಿದೆ. ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯಕ್ಕೆ ಮರು ನೇಮಕ ಮಾಡಲಾಗಿದೆ.
ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿತ್ತು. ಅದಾದ ಮೇಲೆ ರಾಜ್ಯ ಸರ್ಕಾರವು ರಾಮಚಂದ್ರ ರಾವ್ ಅವರನ್ನು ದೀರ್ಘಕಾಲದ ರಜೆಯ ಮೇಲೆ ಕಳುಹಿಸಿತ್ತು. ಇದೀಗ ಅವರಿಗೆ ಜಾರಿ ನಿರ್ದೇಶನಾಲಯದ ಡಿಜಿಪಿ ಹುದ್ದೆ ನೀಡಿ ಆದೇಶಿಸಿದೆ.
ದುಬೈನಿಂದ ಚಿನ್ನವನ್ನು ಕಳ್ಳ ಸಾಗಣೆ ಮೂಲಕ ತರುತ್ತಿದ್ದ ರನ್ಯಾ ರಾವ್ ಅವರು ಮಲತಂದೆ ರಾಮಚಂದ್ರ ರಾವ್ ಅವರ ಹೆಸರು ಬಳಸಿಕೊಂಡು ವಿಮಾನ ನಿಲ್ದಾಣದಿಂದ ಹೊರಕ್ಕೆ ಬರುತ್ತಿದ್ದರು ಎಂಬ ಆರೋಪವಿದೆ.
ರಾಮಚಂದ್ರ ರಾವ್ ಪಾತ್ರದ ಕುರಿತು ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಅವರಿಗೆ ಸರ್ಕಾರವು ಜವಾಬ್ದಾರಿ ವಹಿಸಿತ್ತು. ಅದಾದ ಮೇಲೆ ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿತ್ತು. ಕಡ್ಡಾಯ ರಜೆಯ ಮೇಲೆ ಕಳುಹಿಸುವುದಕ್ಕೂ ಮುನ್ನ ರಾಜ್ಯ ಪೊಲೀಸ್ ಗೃಹ ನಿರ್ಮಾಣ ಮತ್ತು ಮೂಲಸೌಕರ್ಯ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.