ಚಿತ್ರದುರ್ಗ: ಇಲ್ಲಿನ ಮುರುಘಾ ಮಠ ಹಾಗೂ ಬಾಲಕಿಯರ ಬಾಲಮಂದಿರಕ್ಕೆ ಮಂಗಳವಾರ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಸೋಮವಾರ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಕಾರಣಕ್ಕೆ ಎಚ್ಚೆತ್ತ ಪೊಲೀಸರು ಮಠದ ಆವರಣದಲ್ಲಿ ಬೀಡುಬಿಟ್ಟಿದ್ದಾರೆ. ಮಠದ ಹೊರಗೆ ಹಾಗೂ ಒಳಗೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಮಠದ ಆವರಣ ಪ್ರವೇಶಿಸುವ ಪ್ರತಿ ವಾಹನ, ವ್ಯಕ್ತಿಗಳ ಮೇಲೆ ನಿಗಾ ಇಡಲಾಗಿದೆ. ದೀಕ್ಷೆ ಪಡೆದ ಮಾಠಾಧೀಶರು ಹಾಗೂ ರಾಜಕೀಯ ಮುಖಂಡರು ಮುರುಘಾ ಮಠಕ್ಕೆ ಧಾವಿಸಿ ಶರಣರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ರಾಜ್ಯ ಖನಿಜ ನಿಗಮದ ಮಾಜಿ ಅಧ್ಯಕ್ಷ ಎಸ್.ಲಿಂಗಮೂರ್ತಿ, ಮುರುಘಾ ಮಠದ ಸಲಹಾ ಸಮಿತಿ ಸದಸ್ಯ ಆನಂದಪ್ಪ ಮಠಕ್ಕೆ ಭೇಟಿ ನೀಡಿದ್ದರು.
ಸಂತ್ರಸ್ತ ಬಾಲಕಿಯರಿಗೆ ಆಶ್ರಯ ಕಲ್ಪಿಸಿದ ಬಾಲಕಿಯರ ಬಾಲಮಂದಿರಕ್ಕೂ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಬಾಲಮಂದಿರದ ಎದುರು ಎರಡು ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದ ಹಿನ್ನಲೆಯಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ಬಾಲಕಿಯರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸುವ ಸಾಧ್ಯತೆ ಇದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.