ಬೆಂಗಳೂರು ಕಾಲ್ತುಳಿತ
ಕೃಪೆ: ಪಿಟಿಐ
ಬೆಂಗಳೂರು: ‘ಬೆಂಗಳೂರು ರಾಯಲ್ ಚಾಲೆಂಜರ್ಸ್ (ಆರ್ಸಿಬಿ) ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹ ವಿಚಾರಣಾ ಆಯೋಗ ಸಲ್ಲಿಸಿರುವ ವರದಿಯನ್ನು ರದ್ದುಗೊಳಿಸಬೇಕು’ ಎಂದು ಕೋರಲಾದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಇದೇ 7ಕ್ಕೆ ಮುಂದೂಡಿದೆ.
‘ಪ್ರಶ್ನಿಸಲಾಗಿರುವ ನ್ಯಾಯಮೂರ್ತಿ ಕುನ್ಹ ವರದಿಯನ್ನು ರದ್ದುಗೊಳಿಸಬೇಕು’ ಎಂದು ಕೋರಿ ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್ವರ್ಕ್ಸ್ ನಿರ್ದೇಶಕ ಸುನಿಲ್ ಮ್ಯಾಥ್ಯೂ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಜಯಂತ್ ಬ್ಯಾನರ್ಜಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ನ್ಯಾ. ಕುನ್ಹ ವರದಿಯನ್ನು ಈತನಕ ನಮಗೆ ನೀಡಿಲ್ಲ. ಆದರೆ, ವರದಿಯು ಮಾಧ್ಯಮಗಳಲ್ಲಿ ಸೋರಿಕೆಯಾಗುತ್ತಿದೆ’ ಎಂಬ ಅಂಶವನ್ನು ಪುನರುಚ್ಚರಿಸಿದರು. ವಿಚಾರಣೆಯನ್ನು ಇದೇ 7ಕ್ಕೆ ಮುಂದೂಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.