ಹಾಸನ: ‘ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸೋತಿರುವುದರಿಂದ ವೈಯಕ್ತಿಕವಾಗಿ ಬೇಸರವಾಗಿದ್ದು, ಎಲ್ಲರೂ ಒಪ್ಪಿದರೆ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಶನಿವಾರ ಇಲ್ಲಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಹಿರಿಯ ನಾಯಕರಾದ ಎಚ್.ಡಿ.ಕುಮಾರಸ್ವಾಮಿ ಜವಾಬ್ದಾರಿ ತೆಗೆದುಕೊಳ್ಳುವುದಾದರೆ ನನ್ನ ಅಭ್ಯಂತರವಿಲ್ಲ. ಆದರೆ ರಾಜೀನಾಮೆ ನೀಡುವುದು ಎಲ್ಲದಕ್ಕೂ ಪರಿಹಾರವಲ್ಲ’ ಎಂದರು.
‘ಜನರು ಸ್ಥಿರ ಸರ್ಕಾರ ಬಯಸಿದ್ದರಿಂದಲೇ ಬಿಜೆಪಿಯನ್ನು ಬೆಂಬಲಿಸಿದ್ದಾರೆ. 12 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲು ಕಾರಣ, ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೋರಿಸಿದ ಸಚಿವ ಸ್ಥಾನದ ಆಸೆ. ಅದನ್ನು ನಂಬಿ ಜನ ಮತ ಹಾಕಿದ್ದಾರೆ. ಇದು ಬಿಜೆಪಿಗೆ ತಾತ್ಕಾಲಿಕ ಗೆಲುವಾಗಿದ್ದು, ಜೆಡಿಎಸ್ಗೆ ತಾತ್ಕಾಲಿಕ ಸೋಲಾಗಿದೆ’ ಎಂದು ವಿಶ್ಲೇಷಿಸಿದರು.
‘ಮುಂದಿನ ದಿನಗಳಲ್ಲಿ ಪ್ರವಾಸ ಮಾಡಿ ಜಿಲ್ಲಾ, ತಾಲ್ಲೂಕು, ಹೋಬಳಿ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಲಾಗುವುದು. ಸೋಲಿಗೆ ಕಾರಣ ಕುರಿತು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಹಾಗೂ ಹಿರಿಯರ ನೇತೃತ್ವದಲ್ಲಿ ಸಭೆ ಕರೆದು ಆತ್ಮಾವಲೋಕನ ಮಾಡಿಕೊಳ್ಳಲಾಗುವುದು. ವಿವಿಧ ಘಟಕಗಳನ್ನು ಪುನರ್ ರಚಿಸುವ ಸಂಬಂಧ ಎಲ್ಲಾ ಜಿಲ್ಲೆಗಳ ಪದಾಧಿಕಾರಿಗಳ ಜತೆ ಚರ್ಚಿಸಲಾಗುವುದು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.