ಬೆಂಗಳೂರು: ‘ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿಆಗಸ್ಟ್ 15ರಂದು ಬೆಳಿಗ್ಗೆ 8 ಗಂಟೆಯವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ’ ಎಂದುಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು.
ಕರಾವಳಿ ಭಾಗದಲ್ಲಿ ಪಶ್ಚಿಮ ದಿಕ್ಕಿನ ಕಡೆಗೆ ಗಂಟೆಗೆ45ರಿಂದ 55 ಕಿಲೊಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಸಮುದ್ರದಲ್ಲಿ 2.8 ರಿಂದ3.3 ಮೀಟರ್ನಷ್ಟು ಎತ್ತರದ ಅಲೆಗಳೂ ಏಳುತ್ತಿವೆ. ಹೀಗಾಗಿ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.
ಬುಧವಾರ ಗೋಕರ್ಣದಲ್ಲಿ 14 ಸೆಂ.ಮೀ.ಮಳೆಯಾಗಿದೆ. ಲೋಂಡಾ 12, ಹೊನ್ನಾವರ 10, ಕುಂದಾಪುರ 9, ಕಾರ್ಕಳ, ಪಣಂಬೂರು, ಮಂಗಳೂರಿನಲ್ಲಿ ತಲಾ 7 ಸೆಂ.ಮೀ.ಮಳೆಯಾಗಿದೆ.
ಬೆಟ್ಟಗುಡ್ಡ ಪ್ರದೇಶದಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆಯಿದ್ದು ಗುಡ್ಡಗಾಡು ಹಾಗೂ ಬೆಟ್ಟದ ತಪ್ಪಲಿನ ನಿವಾಸಿಗಳು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಡಳಿತ ಕೋರಿದೆ. ವಿರಾಜಪೇಟೆಯ ಅಯ್ಯಪ್ಪಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು ಸ್ಥಳೀಯ ರಲ್ಲಿ ಆತಂಕ ಹೆಚ್ಚಿಸಿದೆ. ಸ್ಥಳೀಯನಿವಾಸಿಗಳನ್ನು ಬುಧವಾರ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಚಾರ್ಮಾಡಿ ಬಂದ್: ಭೂಕುಸಿತದಿಂದ ಭಾರಿ ಪ್ರಮಾಣದ ಹಾನಿಗೀಡಾಗಿರುವ ಚಾರ್ಮಾಡಿ ಘಾಟಿ ಮಾರ್ಗದಲ್ಲಿ ಒಂದು ತಿಂಗಳವರೆಗೆ ವಾಹನ ಸಂಚಾರ ನಿಷೇಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.
ಪರಿಹಾರ ಘೋಷಣೆ: ಪ್ರವಾಹ ಸಂತ್ರಸ್ತ ಕುಟುಂಬಗಳಿಗೆ ತಲಾ ₹ 10 ಸಾವಿರ ಪರಿಹಾರ ನೀಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಎನ್ಡಿಆರ್ಎಫ್ನ ₹6,200 ಹಾಗೂ ರಾಜ್ಯ ಸರ್ಕಾರದ ವತಿಯಿಂದ ₹ 3,800 ಸೇರಿಸಿ ಒಟ್ಟು ₹10,000 ಪರಿಹಾರ ನೀಡಲು ನಿರ್ಧರಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.