ADVERTISEMENT

ಶಿಕ್ಷಕರ ವರ್ಗಾವಣೆ ನೀತಿ: ಕರಡು ಅಧಿಸೂಚನೆ ಪ್ರಕಟ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2022, 12:43 IST
Last Updated 16 ನವೆಂಬರ್ 2022, 12:43 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು:ಶಿಕ್ಷಕರ ವರ್ಗಾವಣೆಗೆ ಇದ್ದ ಹಲವು ನಿರ್ಬಂಧಗಳನ್ನು ರದ್ದುಪಡಿಸಿ, ಶಿಕ್ಷಕ ಸ್ನೇಹಿ ವರ್ಗಾವಣೆ ನೀತಿ ಜಾರಿಗೊಳಿಸಲು ಮುಂದಾಗಿರುವ ಸರ್ಕಾರ, ಈ ಸಂಬಂಧ ಬುಧವಾರ ಕರಡು ಅಧಿಸೂಚನೆ ಹೊರಡಿಸಿದೆ.

ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆ–2020ಕ್ಕೆ ತಿದ್ದುಪಡಿ ಮಾಡಿ,ಸಚಿವ ಸಂಪುಟ ಸಭೆ ಅನುಮೋದನೆ ಪಡೆಯಲಾಗಿತ್ತು. ನಂತರ ಅಧಿವೇಶನದಲ್ಲಿ ಮಂಡಿಸಲಾಗಿತ್ತು. ಈಗ ಕರಡು ಅಧಿಸೂಚನೆ ಹೊರಡಿಸಲಾಗಿದ್ದು,ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸಿದ ದಿನದಿಂದ 15 ದಿನಗಳ ನಂತರ ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ವಿವರಿಸಲಾಗಿದೆ.

ಪರಸ್ಪರ ವರ್ಗಾವಣೆಗೆ ಒಂದು ಬಾರಿ ಮಾತ್ರ ಅವಕಾಶ ಇತ್ತು. ಇನ್ನು ಮುಂದೆ ಆ ನಿರ್ಬಂಧ ಇರುವುದಿಲ್ಲ. ಕೆಲಸಕ್ಕೆ ಸೇರಿದ ಮೊದಲ ಐದು ವರ್ಷ ಹಾಗೂ ನಿವೃತ್ತಿಗೆ ಮೊದಲಿನ ಐದು ವರ್ಷ ವರ್ಗಾವಣೆಗೆ ಅವಕಾಶ ಇರುವುದಿಲ್ಲ. ಆದರೆ, ಒಮ್ಮೆ ವರ್ಗಾವಣೆಯಾದ ಬಳಿಕ ಮತ್ತೆ ಮೂರು ವರ್ಷ ಅರ್ಜಿ ಸಲ್ಲಿಸುವಂತಿಲ್ಲ.

ADVERTISEMENT

ಕಲ್ಯಾಣ ಕರ್ನಾಟಕದ ಆರು ಜಿಲ್ಲೆಗಳು (377 ಜೆ ಅನ್ವಯ), ಮಲೆನಾಡು ವಲಯ ಹಾಗೂ ನಂಜುಂಡಪ್ಪ ವರದಿಯ ಅನ್ವಯ ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶ ಎಂದು ಗುರುತಿಸಲಾಗಿರುವ ತಾಲ್ಲೂಕುಗಳಿಗೆ ಹೋಗಬಯಸುವವರಿಗೆ ವಿಶೇಷ ಆದ್ಯತೆ ಸಿಗಲಿದೆ. ಸಾರ್ವತ್ರಿಕ ವರ್ಗಾವಣೆ ಒಟ್ಟು ವೃಂದ ಬಲದ ಶೇ 11ರಷ್ಟು ಮಿತಿ ಇರುತ್ತದೆ. ವಿಶೇಷ ಆದ್ಯತೆಯಡಿ ವರ್ಗಾವಣೆ ಬಯಸುವವರಿಗೆ ಈ ನಿಯಮ ಅನ್ವಯವಾಗದು. ಉಳಿದೆಲ್ಲ ನಿಯಮಗಳು ಮುಂದುವರಿಯಲಿವೆ.

ಯಾವುದೇ ಒಂದು ಘಟಕ ಹಾಗೂ ವೃಂದದಲ್ಲಿ ಕನಿಷ್ಠ 10 ವರ್ಷ ಅಥವಾ ಎಲ್ಲ ವೃಂದಗಳೂ ಸೇರಿ 15 ವರ್ಷ ಕೆಲಸ ಮಾಡಿದ ಶಿಕ್ಷಕರನ್ನು ಶೇ 25ರಷ್ಟು ಮಿತಿಯ ಒಳಗೆ ಖಾಲಿ ಹುದ್ದೆಗಳಿರುವ ತಾಲ್ಲೂಕಿಗೆ ವರ್ಗಾವಣೆ ಮಾಡಲು ಅವಕಾಶ ಇರುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.