ಬೆಂಗಳೂರು: ಕನ್ನಡ ಭಾಷೆಯ ಅಭಿವೃದ್ಧಿಗಾಗಿ ಸ್ಥಾಪನೆಯಾಗಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಆಡಳಿತ ನಡೆಸಿರುವ ಮೂರೂ ಪಕ್ಷಗಳ ನೇತೃತ್ವದ ಸರ್ಕಾರಗಳು ಸರಿಯಾಗಿ ಅನುದಾನ ಬಿಡುಗಡೆ ಮಾಡಿಲ್ಲ. ಇದರಿಂದಾಗಿ ವಿಶ್ವವಿದ್ಯಾಲಯದಲ್ಲಿ ಮೂಲಸೌಕರ್ಯಗಳ ಕೊರತೆ ಉಂಟಾಗಿದ್ದು, ಸಂಶೋಧನಾರ್ಥಿಗಳಿಗೆ, ಬೋಧಕರಿಗೆ, ಸಿಬ್ಬಂದಿಗೆ ತೊಂದರೆಯಾಗುತ್ತಿದೆ. ಆಳುವ ಸರ್ಕಾರಗಳು ಕನ್ನಡ ಭಾಷೆಯನ್ನು ತಿರಸ್ಕಾರ ಭಾವದಿಂದ ನೋಡಿದರೆ ಕನ್ನಡಿಗರು ನಿಜಕ್ಕೂ ಕ್ಷಮಿಸುವುದಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ವಿಶ್ವವಿದ್ಯಾಲಯದ ಸಂಶೋಧನಾ ಕೇಂದ್ರ, ಬೋಧನಾ ಕಟ್ಟಡ, ರಸ್ತೆಗಳು, ವಿದ್ಯಾರ್ಥಿ ವಸತಿ ಗೃಹಗಳು, ಕಾಂಪೌಂಡ್ ನಿರ್ಮಾಣ ಸೇರಿದಂತೆ ವಿವಿಧ ಮೂಲಸೌಕರ್ಯಗಳಿಗಾಗಿ ಅಲ್ಲಿನ ಕುಲಪತಿ ₹150 ಕೋಟಿಯ ಪ್ರಸ್ತಾವವನ್ನು 2023ರ ಡಿ.20ರಂದು ಸಲ್ಲಿಸಿದ್ದರು. ಇದುವರೆಗೂ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿಲ್ಲ. ಕೂಡಲೇ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.