ADVERTISEMENT

ನೇಕಾರ ಸಮ್ಮಾನ್‌’ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಪರಿಹಾರ

​ಪ್ರಜಾವಾಣಿ ವಾರ್ತೆ
Published 6 ಜುಲೈ 2020, 20:07 IST
Last Updated 6 ಜುಲೈ 2020, 20:07 IST
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ   

ಬೆಂಗಳೂರು: ‘ನೇಕಾರ ಸಮ್ಮಾನ್‌’ ಯೋಜನೆಯಡಿ ನೇಕಾರರಿಗೆ ವಿತರಿಸಲಾಗುವ ವಾರ್ಷಿಕ ತಲಾ ₹ 2 ಸಾವಿರ ಆರ್ಥಿಕ ನೆರವನ್ನು ಮೊದಲ ಹಂತದಲ್ಲಿ 19,744 ಕೈಮಗ್ಗ ನೇಕಾರರ ಬ್ಯಾಂಕ್‌ ಖಾತೆಗಳಿಗೆ ನೇರ ನಗದು ವರ್ಗಾವಣೆ ಮೂಲಕ ರಾಜ್ಯ ಸರ್ಕಾರ ಜಮೆ ಮಾಡಲಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುವ ಮೂಲಕ ಯೋಜನೆಗೆ ಸೋಮವಾರ ಚಾಲನೆ ನೀಡಿದರು.

‘ರಾಷ್ಟ್ರೀಯ ಕೈಮಗ್ಗ ಗಣತಿಯ ಪ್ರಕಾರ ರಾಜ್ಯದಲ್ಲಿ ಒಟ್ಟು 54,789 ಕೈಮಗ್ಗ ನೇಕಾರರು ನೋಂದಣಿ ಮಾಡಿಕೊಂಡಿದ್ದು, ರೇಷ್ಮೆ, ಹತ್ತಿ
ಹಾಗೂ ಉಣ್ಣೆ ವಲಯದ ಕೈಮಗ್ಗ ಮತ್ತು ಪೂರಕ ಚಟುವಟಿಕೆಯಲ್ಲಿ ತೊಡಗಿರುವವರು ಯೋಜನೆಗೆ ಅರ್ಹರಾಗಿದ್ದಾರೆ.ಯೋಜನೆಗೆ ವಾರ್ಷಿಕ ₹ 10.96 ಕೋಟಿ ವೆಚ್ಚ ಆಗಲಿದೆ’ ಎಂದರು.

ADVERTISEMENT

‘ಗಣತಿ ವೇಳೆ ನೇಕಾರರ ಹೆಸರು ಬಿಟ್ಟು ಹೋಗಿದ್ದರೆ ಅಂಥವರಿಗೂ ಯೋಜನೆಯಲ್ಲಿ ಅವಕಾಶ ಕಲ್ಪಿಸಲಾಗುವುದು’ ಎಂದು ಅವರು ಸ್ಪಷ್ಟಪಡಿಸಿದರು. ‘ಈವರೆಗೆ 40,634 ಕೈಮಗ್ಗ ನೇಕಾರರು ಸೇವಾಸಿಂಧು ತಂತ್ರಾಂಶದಲ್ಲಿ ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ, 37,314 ಅರ್ಜಿಗಳನ್ನು ಪರಿಶೀಲಿಸಿ ಅನುಮೋದನೆ ನೀಡಲಾಗಿದೆ. ಉಳಿದ, ಅರ್ಹ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ಮುಂದಿನ ದಿನಗಳಲ್ಲಿಆರ್ಥಿಕ ನೆರವು ವರ್ಗಾಯಿಸಲಾಗುವುದು’ ಎಂದರು.

ವಿದ್ಯುತ್ ಮಗ್ಗ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1.25 ಲಕ್ಷ ಕೂಲಿ ಕೆಲಸಗಾರರಿಗೆ ಒಂದು ಬಾರಿಯ ಪರಿಹಾರ ಧನವಾಗಿ
₹ 2 ಸಾವಿರ ವಿತರಿಸಲಾಗುತ್ತಿದ್ದು, ಅರ್ಹ 8,897 ಅರ್ಜಿದಾರರಿಗೆ ನೇರ ನಗದು ವರ್ಗಾವಣೆ ಮಾಡಲಾಯಿತು.

ಜವಳಿ ಸಚಿವ ಶ್ರೀಮಂತ ಪಾಟೀಲ ಮಾತನಾಡಿ, ‘ಸಂಕಷ್ಟದಲ್ಲಿರುವ ನೇಕಾರರಿಗೆ ಈ ಯೋಜನೆಯಿಂದ ಅನುಕೂಲವಾಗಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.