ADVERTISEMENT

ರೇಣುಕಸ್ವಾಮಿ ಕೊಲೆ ಪ್ರಕರಣ: ಪ್ರದೋಷ್‌ ರಾವ್ ಅರ್ಜಿ ವಿಚಾರಣೆ 11ಕ್ಕೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2024, 16:08 IST
Last Updated 2 ಸೆಪ್ಟೆಂಬರ್ 2024, 16:08 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರ ಮಾಡಿರುವುದನ್ನು ಆಕ್ಷೇಪಿಸಿ ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ಪ್ರದೋಷ್ ಎಸ್‌.ರಾವ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇದೇ 11ಕ್ಕೆ ನಿಗದಿಪಡಿಸಿದೆ.

ಈ ಸಂಬಂಧ ಪ್ರಕರಣದ 14ನೇ ಆರೋಪಿಯಾದ ನಗರದ ಪ್ರದೋಷ್‌, ಸಲ್ಲಿಸಿರುವ ರಿಟ್‌ ಅರ್ಜಿಯು ಸೋಮವಾರ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ವಿಚಾರಗೆ ಬಂದಿತು. 

ಪ್ರದೋಷ್‌ ಪರ ಹೈಕೋರ್ಟ್‌ ವಕೀಲ ಬಿ.ಜೆ.ಹಿತೇಶ್‌ ಗೌಡ ಕೆಲ ಕಾಲ ವಾದ ಮಂಡಿಸಿದರು. ಇದನ್ನು ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 11ಕ್ಕೆ ಮುಂದೂಡಿತು. 

ADVERTISEMENT

ಅರ್ಜಿಯಲ್ಲಿ ಏನಿದೆ?: ‘ರೇಣುಕಸ್ವಾಮಿ ಕೊಲೆ ಪ್ರಕರಣದ ಮುಖ್ಯ ಆರೋಪಿ ನಟ ದರ್ಶನ್‌ಗೆ ಪರಪ್ಪನ ಅಗ್ರಹಾರದಲ್ಲಿ ವಿಶೇಷ ಆತಿಥ್ಯ ನೀಡಲಾಗಿದೆ ಎಂಬ ಆರೋಪದಡಿ ಅರ್ಜಿದಾರರನ್ನು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಲಾಗಿದೆ. ಆತಿಥ್ಯ ನೀಡಿಕೆ ಆರೋಪದಲ್ಲಿ ಪ್ರದೂಷ್ ಪಾತ್ರ ಇಲ್ಲ. ಹೀಗಾಗಿ, ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲೇ ಇರಿಸಲು ಅವಕಾಶ ಮಾಡಿಕೊಡಬೇಕು. ಈ ಸಂಬಂಧ 24ನೇ ಎಸಿಎಂಎಂ ನ್ಯಾಯಾಲಯ 2024ರ ಆಗಸ್ಟ್‌ 27ರಂದು ಹೊರಡಿಸಿರುವ ಆದೇಶವನ್ನು ರದ್ದುಪಡಿಸಬೇಕು’ ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.