ಬೆಂಗಳೂರು: ‘ವಿವಿಧ ಇಲಾಖೆಗಳಲ್ಲಿನ ನಾಗರಿಕ ಸೇವಾ ಅಧಿಕಾರಿಗಳಿಗೆ ಬಡ್ತಿಯಲ್ಲಿ ಮೀಸಲು ಜಾರಿಗೊಳಿಸಲು ಉಂಟಾಗುತ್ತಿರುವ ಗೊಂದಲ ನಿವಾರಣೆಯ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕರ್ನಾಟಕ ನಾಗರಿಕ ಸೇವಾ ಕಾಯ್ದೆ–2017 ರ ಅಡಿ ಹೊಸ ಮತ್ತು ಸಮಗ್ರ ಮಾರ್ಗಸೂಚಿಗಳನ್ನು ಹೊರಡಿಸುವುದು ಸೂಕ್ತ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಕೆಲ ಅಧಿಕಾರಿಗಳಿಗೆ ಕೆಪಿಟಿಸಿಎಲ್ ನೀಡಿರುವ ಬಡ್ತಿಯು ಕಾನೂನಿಗೆ ವಿರುದ್ಧವಾಗಿದೆ’ ಎಂದು ಆಕ್ಷೇಪಿಸಿ ರಾಜ್ಯ ಸರ್ಕಾರದ ವಿದ್ಯುತ್ ಕಂಪನಿಗಳ ಮುಖ್ಯ ಎಂಜಿನಿಯರ್ಗಳು, ನಿರ್ದೇಶಕರು, ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾನ್ಯ ವರ್ಗಕ್ಕೆ ಸೇರಿದ ಬಿ.ಗುರುಮೂರ್ತಿ ಮತ್ತಿತರ ಹಿರಿಯ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್.ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.
‘2017ರ ಕಾಯ್ದೆಯನ್ನು ಜಾರಿಗೆ ತರಲು 2019 ರ ಜೂನ್ 24 ರಂದು ಹೊರಡಿಸಲಾದ ಸರ್ಕಾರಿ ಆದೇಶದಲ್ಲಿ ಕೆಲವು ಅಸ್ಪಷ್ಟತೆಗಳಿವೆ. ಹೆಚ್ಚಿನ ಗೊಂದಲಗಳನ್ನು ತಪ್ಪಿಸಲು ಈ ಆದೇಶವನ್ನು ಹಿಂಪಡೆಯುವುದು ಸೂಕ್ತ ಮತ್ತು ಹೊಸ ಮಾರ್ಗಸೂಚಿ ಜಾರಿಗೊಳಿಸಿರುವುದೇ ಸರಿಯಾದ ದಾರಿ. ಇದರಿಂದಾಗಿ ಕಾಯ್ದೆ ಅನುಷ್ಠಾನದಲ್ಲಿ ಆಗಬಹುದಾದ ಗೊಂದಲಗಳು ನಿವಾರಣೆಯಾಗುತ್ತದೆ. ಸರ್ಕಾರಿ ಅಧಿಕಾರಿಗಳ ಕಾರ್ಯನಿರ್ವಹಣೆಯ ಮೇಲೂ ಪರಿ ಣಾಮ ಬೀರುತ್ತದೆ. ಅನಗತ್ಯ ವಾಜ್ಯಗಳಿಗೆ ಆಸ್ಪದ ನೀಡುವುದೂ ತಪ್ಪುತ್ತದೆ’ ಎಂದು ತಿಳಿಸಿದೆ. ‘ಹೊಸ ಮಾರ್ಗಸೂಚಿಗಳನ್ನು ರೂಪಿಸುವಾಗ ಸುಪ್ರೀಂ ಕೋರ್ಟ್ನ ಎಲ್ಲಾ ತೀರ್ಪುಗಳನ್ನು ಗಮನದಲ್ಲಿ ಇರಿಸಿಕೊಂಡಿರಬೇಕು. ಬಡ್ತಿಯಲ್ಲಿನ ಬ್ಯಾಕ್ ಲಾಗ್ ಖಾಲಿ ಹುದ್ದೆಗಳ ಭರ್ತಿ, ನಂತರದ ಮೀಸಲು, ಮೀಸಲಾತಿ ವರ್ಗದವರು ಸಾಮಾನ್ಯವಾಗಿ ಅರ್ಹರಾಗಿರುತ್ತಾರೆಂಬ ಸಮಸ್ಯೆ ನಿವಾರಣೆ, ಅರ್ಹತೆ ಮತ್ತು ಇತರ ಸಂಬಂಧಿತ ಅಂಶಗಳನ್ನು ಗಮನದಲ್ಲಿ ಇಟ್ಟುಕೊಳ್ಳಬೇಕಾಗಿದೆ’ ಎಂದು ಆದೇಶದಲ್ಲಿ ವಿವರಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.