ADVERTISEMENT

ಹೋರಾಟದಿಂದ ಮಾತ್ರ ಮೀಸಲಾತಿ ಸಾಧ್ಯ: ಕಾಗಿನೆಲೆಶ್ರೀ

ಕುರುಬ ಸಮುದಾಯದ ಬೃಹತ್ ಜಾಗೃತಿ ಸಮಾವೇಶ

​ಪ್ರಜಾವಾಣಿ ವಾರ್ತೆ
Published 7 ಜನವರಿ 2021, 19:21 IST
Last Updated 7 ಜನವರಿ 2021, 19:21 IST
ಶಿಕಾರಿಪುರದ ಹೊಸ ಸಂತೆ ಮೈದಾನದಲ್ಲಿ ಕುರುಬ ಸಮುದಾಯದ ಎಸ್‌ಟಿ ಮೀಸಲಾತಿಗೆ ಒತ್ತಾಯಿಸಿ ಆಯೋಜಿಸಿದ್ದ ಬೃಹತ್ ಜಾಗೃತಿ ಸಮಾವೇಶವನ್ನು ಕಾಗಿನೆಲೆ ಕನಕ ಗುರುಪೀಠದ ಪೀಠಾಧ್ಯಕ್ಷ ನಿರಂಜನಾನಂದಪುರಿ ಸ್ವಾಮೀಜಿ ಉದ್ಘಾಟಿಸಿದರು
ಶಿಕಾರಿಪುರದ ಹೊಸ ಸಂತೆ ಮೈದಾನದಲ್ಲಿ ಕುರುಬ ಸಮುದಾಯದ ಎಸ್‌ಟಿ ಮೀಸಲಾತಿಗೆ ಒತ್ತಾಯಿಸಿ ಆಯೋಜಿಸಿದ್ದ ಬೃಹತ್ ಜಾಗೃತಿ ಸಮಾವೇಶವನ್ನು ಕಾಗಿನೆಲೆ ಕನಕ ಗುರುಪೀಠದ ಪೀಠಾಧ್ಯಕ್ಷ ನಿರಂಜನಾನಂದಪುರಿ ಸ್ವಾಮೀಜಿ ಉದ್ಘಾಟಿಸಿದರು   

ಶಿಕಾರಿಪುರ: ಕುರುಬ ಸಮುದಾಯ ಜನರು ಜಾಗೃತರಾಗಿ ಹೋರಾಟ ನಡೆಸಿದಾಗ ಮಾತ್ರ ಎಸ್‌ಟಿ ಮೀಸಲಾತಿ ಕುರುಬ ಜನಾಂಗಕ್ಕೆ ದೊರೆಯುತ್ತದೆ ಎಂದು ಕಾಗಿನೆಲೆ ಕನಕ ಗುರುಪೀಠದ ಪೀಠಾಧ್ಯಕ್ಷ ನಿರಂಜನಾನಂದಪುರಿ ಸ್ವಾಮೀಜಿ ಸಲಹೆ ನೀಡಿದರು.

ಪಟ್ಟಣದ ಹೊಸ ಸಂತೆ ಮೈದಾನದಲ್ಲಿ ಗುರುವಾರ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠ, ಕುರುಬರ ಎಸ್‌ಟಿ ಹೋರಾಟ ಸಮಿತಿ ಹಾಗೂ ಕರ್ನಾಟಕ ಪ್ರದೇಶ ಕುರುಬರ ಸಂಘ ಕುರುಬ ಸಮುದಾಯದ ಎಸ್‌ಟಿ ಮೀಸಲಾತಿಗೆ ಒತ್ತಾಯಿಸಿ ಆಯೋಜಿಸಿದ್ದ ಶಿವಮೊಗ್ಗ-ಚಿಕ್ಕಮಗಳೂರು ವಿಭಾಗ ಮಟ್ಟದ ಬೃಹತ್ ಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕುರುಬರ ಎಸ್‌ಟಿ ಹೋರಾಟ ಸಮಿತಿ ಖಜಾಂಚಿ ಕೆ.ಇ. ಕಾಂತೇಶ್, ‘ಎಸ್‌ಟಿ ಮೀಸಲಾತಿಗಾಗಿ ಅನೇಕ ವರ್ಷಗಳ ಹಿಂದೆ ನಮ್ಮ ಸಮಾಜದ ಮುಖಂಡರು ಹೋರಾಟ ಮಾಡಿದ್ದಾರೆ. ಪ್ರಸ್ತುತ ಕಾಗಿನೆಲೆಶ್ರೀಗಳು ಹೋರಾಟದ ನೇತೃತ್ವ ವಹಿಸಿದ್ದು, ಜನವರಿ 15ರಂದು ಕಾಗಿನೆಲೆಯಿಂದ ಬೆಂಗಳೂರಿಗೆ ಆಯೋಜಿಸಿರುವ ಪಾದಯಾತ್ರೆಯಲ್ಲಿ ಪಾಲ್ಗೊಂಡು ಪಾದಯಾತ್ರೆ ಯಶಸ್ವಿಗೊಳಿಸಬೇಕು. ರಾಜ್ಯದ ಪವರ್ ಸೆಂಟರ್ ಶಿಕಾರಿಪುರ. ನಮ್ಮ ಕೂಗು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೇಳಬೇಕು. ಎಸ್‌ಟಿ ಮೀಸಲಾತಿ ನೀಡುವಂತೆ ಮುಖ್ಯಮಂತ್ರಿ ಅವರು ಕೇಂದ್ರಕ್ಕೆ ಶಿಫಾರಸು ಮಾಡಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಕನಕ ಗುರುಪೀಠ ಹೊಸದುರ್ಗ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ, ಸಚಿವ ಕೆ.ಎಸ್‌. ಈಶ್ವರಪ್ಪ, ಮಾಜಿ ಸಚಿವ ಎಚ್.ಎಂ. ರೇವಣ್ಣ, ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಕುರುಬ ಸಮುದಾಯ ಎಸ್‌ಟಿ ಹೋರಾಟ ಸಮಿತಿ ಅಧ್ಯಕ್ಷ
ಕೆ. ವಿರೂಪಾಕ್ಷಪ್ಪ ಮತ್ತು ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.