ಬೆಂಗಳೂರು:ಕೋವಿಡ್ ಅಪಾಯ ಭತ್ಯೆ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿರುವ ಸ್ಥಾನಿಕ ವೈದ್ಯರು, ಇದೇ ಗುರುವಾರ (ಅ.7) ಬೆಳಿಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಸೇವೆ ಬಹಿಷ್ಕರಿಸುವುದಾಗಿ ಘೋಷಿಸಿದ್ದಾರೆ.
‘ತುರ್ತು ಚಿಕಿತ್ಸೆ, ತೀವ್ರ ನಿಗಾ ಘಟಕ ಸೇವೆ ಹಾಗೂ ಕೋವಿಡ್ ಚಿಕಿತ್ಸೆಯ ಮೇಲೆ ಸೇವಾ ಬಹಿಷ್ಕಾರ ಪರಿಣಾಮ ಬೀರದು. ಈ ಸೇವೆಯಲ್ಲಿರುವವರು ಎಂದಿನಂತೆ ಕರ್ತವ್ಯನಿರ್ವಹಿಸಲಿದ್ದಾರೆ’ ಎಂದುಕರ್ನಾಟಕ ಸ್ಥಾನಿಕ ವೈದ್ಯರ ಸಂಘ ತಿಳಿಸಿದೆ.
‘ಕೋವಿಡ್ ಎರಡನೇ ಅಲೆಯಿಂದಾಗಿ ಹಲವಾರು ಜನರು ಸಮಸ್ಯೆ ಎದುರಿಸಿದ್ದಾರೆ. ಆಸ್ಪತ್ರೆಗಳಲ್ಲಿ ಹಾಸಿಗೆಗಳು ಭರ್ತಿಯಾಗಿದ್ದರಿಂದ ರೋಗಿಗಳಿಗೆ ಚಿಕಿತ್ಸೆ ಒದಗಿಸುವುದು ವೈದ್ಯರಿಗೂ ಸವಾಲಾಗಿತ್ತು. ಈ ಅವಧಿಯಲ್ಲಿ ಸೋಂಕಿತರನ್ನು ಉಳಿಸಿಕೊಳ್ಳಲು ನಮ್ಮ ವೈದ್ಯರು ಹಗಲಿರುಳು ಶ್ರಮಿಸಿದ್ದಾರೆ. ನಮ್ಮ ಸೇವೆಗೆ ಸರ್ಕಾರವುಕೋವಿಡ್ ಅಪಾಯ ಭತ್ಯೆ ನೀಡುವುದಾಗಿ ಈ ಹಿಂದೆ ಘೋಷಿಸಿತ್ತು. ಆದರೆ, ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಸಂಘದ ಅಧ್ಯಕ್ಷೆ ಡಾ. ನಮ್ರತಾ ಸಿ. ಬೇಸರ ವ್ಯಕ್ತಪಡಿಸಿದ್ದಾರೆ.
‘ಕೋವಿಡ್ ಪೀಡಿತರಿಗೆಗುಣಮಟ್ಟದ ಚಿಕಿತ್ಸೆ ನೀಡಿ, ಸಾವಿನ ಪ್ರಮಾಣ ತಗ್ಗಿಸುವಲ್ಲಿಸ್ಥಾನಿಕವೈದ್ಯರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಹೀಗಾಗಿ, ಸರ್ಕಾರ ಕೂಡಲೇ ಕೋವಿಡ್ ಅಪಾಯ ಭತ್ಯೆ ಬಿಡುಗಡೆಗೊಳಿಸಬೇಕು’ ಎಂದು ಆಗ್ರಹಿಸಿದ್ದಾರೆ.
‘ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಮೆರಿಟ್ ಸೀಟು ಪಡೆದವರಿಗೆ ಶೈಕ್ಷಣಿಕ ಶುಲ್ಕ ಪರಿಷ್ಕರಣೆಯಿಂದ ತಾರತಮ್ಯ ಆಗುತ್ತಿದೆ. ಇತರ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಹೆಚ್ಚು ಶುಲ್ಕ ಪಡೆಯಲಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ ಶ್ರಮಿಸಿದಸ್ಥಾನಿಕವೈದ್ಯರ ಸೇವೆ ಪರಿಗಣಿಸಿ, ಶೈಕ್ಷಣಿಕ ಶುಲ್ಕವನ್ನು 2018ರಂತೆ ಪುನರ್ ಪರಿಷ್ಕರಿಸಬೇಕು’ಎಂದುಮನವಿ ಮಾಡಿದ್ದಾರೆ.
ಕಡ್ಡಾಯ ಗ್ರಾಮೀಣ ಸೇವೆಯಲ್ಲಿ ತೊಡಗಿರುವ ವೈದ್ಯರಿಗೆ ಬಾಕಿ ವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.