ಬೆಂಗಳೂರು: ಕರ್ನಾಟಕ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರನ್ನು ಕರ್ನಾಟಕ ಲೋಕಾಯುಕ್ತದ ಎರಡನೇ ಉಪ ಲೋಕಾಯುಕ್ತರನ್ನಾಗಿ ನೇಮಕ ಮಾಡಲಾಗಿದೆ.
ಫಣೀಂದ್ರ ಅವರನ್ನು ನೇಮಿಸಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಮಾರ್ಚ್ 22ರಂದು ಆದೇಶ ಹೊರಡಿಸಿದ್ದಾರೆ. 2020ರ ಡಿಸೆಂಬರ್ 16ರಂದು ನಿವೃತ್ತ ನ್ಯಾಯಮೂರ್ತಿ ಎನ್.ಆನಂದ್ ಉಪ ಲೋಕಾಯುಕ್ತ ಹುದ್ದೆಯಿಂದ ನಿವೃತ್ತರಾದಾಗಿನಿಂದಲೂ ಈ ಹುದ್ದೆ ಖಾಲಿ ಇತ್ತು.
ಮತ್ತೊಂದು ಉಪ ಲೋಕಾಯುಕ್ತ ಹುದ್ದೆಯಲ್ಲಿ ಸದ್ಯ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಕಾರ್ಯನಿರ್ವಹಿಸುತ್ತಿದ್ದಾರೆ. ಲೋಕಾಯುಕ್ತರಾಗಿದ್ದ ನಿವೃತ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ 2022ರ ಜನವರಿ 28ರಂದು ಅಧಿಕಾರ ಪೂರ್ಣಗೊಳಿಸಿದ್ದು, ಎರಡು ತಿಂಗಳಿಂದಲೂ ಲೋಕಾಯುಕ್ತ ಹುದ್ದೆ ಖಾಲಿ ಇದೆ.
1958ರ ಮೇ 20ರಂದು ಜನಿಸಿದ ಫಣೀಂದ್ರ ಅವರು 1985ರಲ್ಲಿ ತುಮಕೂರು ಜಿಲ್ಲೆಯಲ್ಲಿ ತಮ್ಮ ವಕೀಲ ವೃತ್ತಿ ಆರಂಭಿಸಿದರು. 1998ರಲ್ಲಿ ನೇರವಾಗಿ ಜಿಲ್ಲಾ ನ್ಯಾಯಾಧೀಶರಾಗಿ ನೇಮಕಗೊಂಡ ಅವರು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸಿ, 2013ರ ಅಕ್ಟೋಬರ್ 24ರಂದು ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.