ADVERTISEMENT

ಲಾಕ್‌ಡೌನ್‌ ಮುಂದುವರಿಕೆ ಅನಿವಾರ್ಯ: ಆರ್‌. ಅಶೋಕ

​ಪ್ರಜಾವಾಣಿ ವಾರ್ತೆ
Published 31 ಮೇ 2021, 20:15 IST
Last Updated 31 ಮೇ 2021, 20:15 IST
ಆರ್‌.ಅಶೋಕ
ಆರ್‌.ಅಶೋಕ   

ಬೆಂಗಳೂರು: ರಾಜ್ಯದಲ್ಲಿ ಪ್ರತಿದಿನದ ಒಟ್ಟು ಹೊಸ ಕೋವಿಡ್‌ ಪ್ರಕರಣಗಳ ಸಂಖ್ಯೆ 3,000ಕ್ಕಿಂತ ಕಡಿಮೆ ಹಾಗೂ ಬೆಂಗಳೂರಿನಲ್ಲಿ 500ರ ಆಸುಪಾಸಿಗೆ ಬರುವವರೆಗೂ ಲಾಕ್‌ಡೌನ್‌ ಮುಂದುವರಿಸುವುದು ಅನಿವಾರ್ಯ ಎಂದು ಕಂದಾಯ ಸಚಿವ ಆರ್‌. ಅಶೋಕ ಹೇಳಿದರು.

ಮಾಧ್ಯಮ ಪ್ರತಿನಿಧಿಗಳ ಜತೆ ಸೋಮವಾರ ಮಾತನಾಡಿದ ಅವರು, ‘ದೆಹಲಿಯಲ್ಲಿ ಲಾಕ್‌ಡೌನ್‌ ಜಾರಿಗೊಳಿಸಿದ ಕಾರಣದಿಂದ ಪ್ರತಿದಿನದ ಹೊಸ ಪ್ರಕರಣಗಳ ಸಂಖ್ಯೆ 1,000ಕ್ಕೆ ಕುಸಿದಿದೆ. ಆದರೆ, ಬೆಂಗಳೂರಿನಲ್ಲಿ ನಿತ್ಯವೂ 5,000 ಮತ್ತು ರಾಜ್ಯದಲ್ಲಿ 20,000 ಹೊಸ ಪ್ರಕರಣಗಳು ವರದಿಯಾಗುತ್ತಿವೆ. ಈ ಕಾರಣದಿಂದ ಕೆಲವು ದಿನಗಳ ಕಾಲ ಲಾಕ್‌ಡೌನ್‌ ಮುಂದುವರಿಸುವ ಅಗತ್ಯವಿದೆ’ ಎಂದರು.

ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದ ಜವಾಬ್ದಾರಿ ಹೊಂದಿರುವ ಸಚಿವರ ತಂಡ ಪ್ರತಿ ಎರಡು ದಿನಕ್ಕೊಮ್ಮೆ ಸಭೆ ನಡೆಸಲಿದೆ. ಎಲ್ಲ ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಿದ ಬಳಿಕ ಲಾಕ್‌ಡೌನ್‌ ಮುಂದುವರಿಸಬೇಕೆ? ಅಥವಾ ಬೇಡವೆ? ಎಂಬುದರ ಕುರಿತು ನಿರ್ಧಾರಕ್ಕೆ ಬರಲಾಗುವುದು ಎಂದು ಹೇಳಿದರು.

ADVERTISEMENT

ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಕೂಡ ಲಾಕ್‌ಡೌನ್‌ ಮುಂದುವರಿಸುವುದನ್ನು ಬೆಂಬಲಿಸಿ ಮಾತನಾಡಿದರು.

‘ತಜ್ಞರ ಜತೆ ಚರ್ಚಿಸಿ ನಿರ್ಧಾರ’

ಸೋಮವಾರ ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌ ಜತೆ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ‘ಲಾಕ್‌ಡೌನ್‌ ಕುರಿತು ಜೂನ್‌ 4 ಅಥವಾ 5ರಂದು ಸಭೆ ನಡೆಸಲಾಗುವುದು. ತಜ್ಞರ ಜತೆ ಚರ್ಚಿಸಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗವುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.