ಬೆಂಗಳೂರು: ಕಂದಾಯ ಇಲಾಖೆಯ ಅರೆ ನ್ಯಾಯಿಕ ಪ್ರಕರಣಗಳನ್ನು ತಹಶೀಲ್ದಾರ್, ಉಪವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ಕಾಲಮಿತಿಯೊಳಗೆ ಇತ್ಯರ್ಥಪಡಿಸುವಂತೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ತಹಶೀಲ್ದಾರ್ ಹಂತದಲ್ಲಿನ ಅರೆ ನ್ಯಾಯಿಕ ಪ್ರಕರಣಗಳನ್ನು 90 ದಿನಗಳು ಹಾಗೂ ಉಪವಿಭಾಗಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳ ವ್ಯಾಪ್ತಿಯ ಪ್ರಕರಣಗಳನ್ನು ಆರು ತಿಂಗಳಲ್ಲಿ ಇತ್ಯರ್ಥಗೊಳಿಸುವಂತೆ ನಿರ್ದೇಶನ ನೀಡಿರುವುದಾಗಿ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ತಹಶೀಲ್ದಾರ್ಗಳ ಹಂತದಲ್ಲಿ ಒಂದು ವರ್ಷಕ್ಕೆ ಮೇಲ್ಪಟ್ಟ ಒಟ್ಟು 2,215 ಅರ್ಜಿಗಳು ಬಾಕಿ ಇದ್ದವು. ನಾಲ್ಕು ತಿಂಗಳಲ್ಲಿ 680 ಕ್ಕೆ ಇಳಿದಿದೆ. ಡಿಸೆಂಬರ್ನೊಳಗೆ ಇತ್ಯರ್ಥಗೊಳಿಸಲು ಸೂಚಿಸಲಾಗಿದೆ. ಉಪವಿಭಾಗಾಧಿಕಾರಿ ಹಂತದಲ್ಲಿ ಬಾಕಿ ಉಳಿದಿದ್ದ 59,339 ಪ್ರಕರಣಗಳ ಪೈಕಿ 27,960 ಇತ್ಯರ್ಥಗೊಂಡಿವೆ. 5 ವರ್ಷ ಮೇಲ್ಪಟ್ಟ ಪ್ರಕರಣಗಳನ್ನು 32,787 ಗಳಿಂದ 9,873 ಇಳಿಸಲಾಗಿದೆ. ಜನವರಿ ಕೊನೆಯೊಳಗೆ ಬಾಕಿ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಸೂಚಿಸಲಾಗಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಜನಸ್ಪಂದನದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಹೆಚ್ಚು ಅಹವಾಲು ಸಲ್ಲಿಕೆಯಾಗಿದ್ದು, ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ಮೇರೆಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.